ಚಿಂತಾಮಣಿ: ತಾಲ್ಲೂಕಿನ ಕೈವಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿವಿಧ ಯೋಜನೆಗಳ ಅನುದಾನದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ಸೋಮವಾರ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯುತ್ತಿದ್ದಾಗ ವಸತಿ ಯೋಜನೆಗಳ ವಂಚಿತರು ಹಾಗೂ ಸಾರ್ವಜನಿಕರು ಪಂಚಾಯಿತಿಗೆ ಮುತ್ತಿಗೆ ಘೋಷಣೆ ಕೂಗಿದರು.
ಅಭಿವೃದ್ಧಿ ಅಧಿಕಾರಿ ನಾಗರಾಜರಾವ್ ಕೇಂದ್ರ ಸರ್ಕಾರದ ಐದು ಲಕ್ಷ, 12, 13ನೇ ಹಣಕಾಸು ಯೋಜನೆಯ 20 ಲಕ್ಷ ರೂಪಾಯಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ದಲಿತರಿಗೆ ಮಂಜೂರಾಗಿದ್ದ ವಸತಿಗಳನ್ನು ಇತರರಿಗೆ ನೀಡಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಮತ್ತು ಕಾರ್ಯದರ್ಶಿಗಳನ್ನು ಕರೆಸಿಕೊಂಡು ಚೆಕ್ಕುಗಳಿಗೆ ಸಹಿ ಮಾಡಿಸಿಕೊಂಡು ಅವ್ಯವಹಾರ ನಡೆಸುತ್ತಿದ್ದಾರೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಗ್ರಾ.ಪಂ.ಸದಸ್ಯ ರಾಮಚಂದ್ರಪ್ಪ, ವಿ.ಶೈಲಜಾ ಮಂಜುನಾಥ್, ಉಮಾದೇವಿ, ಮಾಜಿ ಅಧ್ಯಕ್ಷ ಕೃಷ್ಣಪ್ಪ, ಮಾಜಿ ಸದಸ್ಯ ಜಾಫರ್ ಹಾಗೂ ಕೈವಾರ ಗ್ರಾಮ ಪಂಚಾಯಿತಿ ಎದುರು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.