ಬೆಂಗಳೂರು: ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ 9ನೇ ಘಟಿಕೋತ್ಸವ ಇದೇ 12 ರಂದು ಆನೇಕಲ್ ತಾಲ್ಲೂಕಿನ ಜಿಗಣಿಯ ಸಂಸ್ಥೆಯ ಪ್ರಶಾಂತಿ ಕುಟೀರಂ ಆವರಣದಲ್ಲಿ ನಡೆಯಲಿದೆ.
ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಡಾ.ಎಚ್.ಆರ್.ನಾಗೇಂದ್ರ ಮಾತನಾಡಿ, ಘಟಿಕೋತ್ಸವದಲ್ಲಿ ಸುಮಾರು 140 ಜನ ಪದವೀಧರರಿಗೆ ಸಂಸ್ಥೆಯ ಅಧ್ಯಕ್ಷ ಡಾ. ಪ್ರಣವ್ ಪಾಂಡ್ಯ ಪದವಿ ಪ್ರದಾನ ಮಾಡಲಿದ್ದಾರೆ. ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ಸಿ.ಶರ್ಮ ಘಟಿಕೋತ್ಸವದ ಮುಖ್ಯ ಭಾಷಣ ಮಾಡಲಿದ್ದಾರೆ ಎಂದರು.
`ಕಳೆದ 9 ವರ್ಷಗಳಿಂದ ಯೋಗದ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ನೀಡುತ್ತಾ ಬರುತ್ತಿರುವ ಸಂಸ್ಥೆಯ ಹಲವು ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಯೋಗವನ್ನು ಪ್ರಚಾರ ಮಾಡುತ್ತಾ ಬಂದಿದ್ದಾರೆ.
ಯೋಗದಲ್ಲಿ ಉನ್ನತ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳಿಗೆ ಉತ್ತಮವಾದ ವೇತನ ಸಿಗುತ್ತಿದೆ~ ಎಂದರು. ಯೋಗ ಸಂಯೋಜಕರಾದ ಎಚ್. ಲೋಕೇಶ್ ಹಾಗೂ ಅನಿಲ್ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.