ಔರಾದ್: ತಾಲ್ಲೂಕಿನ ಚಿಕ್ಲಿ (ಯು) ಗ್ರಾಮದಲ್ಲಿ ಜಲ ನಿರ್ಮಲ ಯೋಜನೆ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಪಂಚಾಯಿತಿಗೆ ಹಸ್ತಾಂತರಿಸಲಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಗುರುವಾರದಿಂದ ಇಲ್ಲಿಯ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.
ಚಿಕ್ಲಿ ಗ್ರಾಮದಲ್ಲಿ ಜಲ ನಿರ್ಮಲ ಯೋಜನೆಯಡಿ ರೂ 1.9 ಕೋಟಿ ಕುಡಿಯುವ ನೀರಿನ ಯೋಜನೆ ಕಾರ್ಯಗತಗೊಳಿಸಲಾಗಿದೆ. ಆದರೆ ಕಾಮಗಾರಿ ಪೂರ್ಣಗೊಂಡು ಕುಡಿಯುವ ನೀರು ಪೂರೈಕೆ ಆಗುವ ಮೊದಲೇ ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಲಾಗಿದೆ ಎಂದು ಧರಣಿ ನಿರತರು ದೂರಿದರು.
ಕುಡಿಯುವ ನೀರಿಗಾಗಿ ಗ್ರಾಮದಲ್ಲಿ ವಿವಿಧ ಯೋಜನೆಗಳು ಕಾರ್ಯಗತಗೊಳಿಸಿದರೂ ಜನರ ಬವಣೆ ಮಾತ್ರ ತಪ್ಪಿಲ್ಲ. ಈ ಕುರಿತು ಪರಿಶೀಲಿಸಿ ಯೋಜನೆ ಜನರಿಗೆ ಮುಟ್ಟಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿಕ್ಲಿಗೆ ಭೇಟಿ ಕೊಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗಿದೆ. ಆದರೂ ಅಧಿಕಾರಿಗಳು ಇತ್ತ ಗಮನಹರಿಸಿಲ್ಲ ಎಂದು ದೂರಿದರು.
ಜಿಲ್ಲಾ ಪಂಚಾಯಿತಿ ಸಿಇಒ ಗ್ರಾಮಕ್ಕೆ ಭೇಟಿ ನೀಡುವ ತನಕ ಧರಣಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ತಾಲ್ಲೂಕು ಪಂಚಾಯಿತಿ ಮುಖ್ಯಾಧಿಕಾರಿ ಹಾಗೂ ಪೊಲೀಸರಿಗೆ ಮನವಿ ಸಲ್ಲಿಸಿದರು.
ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗುಲಾಮ ದಸ್ತಗಿರ್, ಪೀರಖಾನ್ ಮಹೆಬೂಬಖಾನ್, ರಾಜಕುಮಾರ ಚಿಕ್ಲೆ, ಬಾಲಾಜಿ ಚಿಕ್ಲೆ, ಬಸವರಾಜ ಸುತಾರ ಇದ್ದರು.