ಬೆಂಗಳೂರು :ರಾಜಕಾರಣಿಗಳು ಮತ್ತು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಖಾಸಗಿ ದೂರುಗಳನ್ನು ಸಲ್ಲಿಸಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರಿಗೆ ಭದ್ರತೆ ಒದಗಿಸಲು ವಿಳಂಬ ಮಾಡುತ್ತಿರುವ ಕುರಿತು ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿ ವಿವರಣೆ ನೀಡುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ, ನಗರ ಪೊಲೀಸ್ ಕಮಿಷನರ್ ಕೆ.ಜ್ಯೋತಿಪ್ರಕಾಶ್ ಮಿರ್ಜಿ ಅವರಿಗೆ ಆದೇಶಿಸಿದೆ.
ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (ಬಿಎಂಐಸಿ) ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತು ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿರುವ ಅಬ್ರಹಾಂ ಅವರಿಗೆ ರಕ್ಷಣೆ ನೀಡುವಂತೆ ಕೋರಿ ಯೋಜನೆಯಿಂದ ತೊಂದರೆಗೆ ಒಳಗಾದ ರೈತರು ಮಿರ್ಜಿ ಅವರಿಗೆ ಮನವಿ ಸಲ್ಲಿಸಿದ್ದರು.
ಆದರೆ, ಈ ಬಗ್ಗೆ ಅವರು ಯಾವುದೇ ಕ್ರಮ ಜರುಗಿಸಿಲ್ಲ ಎಂದು ಅಬ್ರಹಾಂ ಪರ ವಕೀಲರು ಸೋಮವಾರ ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ದೂರಿದರು.