ಬೆಂಗಳೂರು: ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಮತ್ತು ಸರ್ಕಾರೇತರ ಪ್ರಾಥಮಿಕ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರತ್ಯೇಕವಾಗಿ `ಮುಖ್ಯಮಂತ್ರಿಯವರ ಗ್ರಾಮೀಣ ಶಾಲೆಗಳ ಅಭಿವೃದ್ಧಿ ನಿಧಿ~ ಯನ್ನು ಸ್ಥಾಪಿಸಿ, ಇದಕ್ಕೆ ಸರ್ಕಾರ ಪ್ರತಿ ವರ್ಷ ಬಜೆಟ್ನಲ್ಲಿ ಹಣ ಒದಗಿಸಬೇಕು ಎಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ಒತ್ತಾಯಿಸಿದ್ದಾರೆ.
ಕೈಗಾರಿಕೋದ್ಯಮಿಗಳಿಂದ, ವಿವಿಧ ಸಂಸ್ಥೆಗಳಿಂದ ಹಾಗೂ ದಾನಿಗಳಿಂದ ದೇಣಿಗೆ ಪಡೆದುಕೊಳ್ಳಬೇಕು. ಈ ನಿಧಿಗೆ ಆದಾಯ ತೆರಿಗೆ ವಿನಾಯಿತಿ ಪಡೆದು, ಆ ಹಣವನ್ನು ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಉಪಯೋಗಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿನ ಗ್ರಾಮಾಂತರ ಪ್ರದೇಶಗಳಲ್ಲಿರುವ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ಉಪಾಧ್ಯಾಯರು ಇಲ್ಲದಿರುವುದು, ವಿದ್ಯಾರ್ಥಿಗಳಿಗೆ ಆಟದ ಮೈದಾನ ಇಲ್ಲದಿರುವುದು ಕಂಡುಬಂದಿದೆ. ಇವುಗಳ ನಿರ್ವಹಣೆಗಾಗಿ ಈ ಹಣವನ್ನು ವಿನಿಯೋಗಿಸಬೇಕು ಎಂದು ಆಗ್ರಹಿಸಿದ್ದಾರೆ.