ನವದೆಹಲಿ (ಐಎಎನ್ಎಸ್): ವೋಟಿಗಾಗಿ ನೋಟು ಪ್ರಕರಣದಲ್ಲಿ ದೆಹಲಿ ಪೊಲೀಸರು ಬಂಧಿಸಿರುವ ರಾಜ್ಯಸಭಾ ಸದಸ್ಯ ಹಾಗೂ ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ ಅವರ ಮಧ್ಯಂತರ ಜಾಮೀನು ಹಾಗೂ ಕಾಯಂ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ನೋಟಿಸ್ ನೀಡಿದೆ.
ಪ್ರಕರಣದ ಸ್ಥಿತಿಗತಿ ವರದಿಯನ್ನು ದೆಹಲಿ ಪೊಲೀಸರು ಮೂರು ದಿನಗಳಲ್ಲಿ ಸಲ್ಲಿಸುವಂತೆ ನ್ಯಾಯಾಧೀಶರಾದ ಅಜಿತ್ ಬಾರಿಹೊಕ್ ಸೂಚಿಸಿದರು.
ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ)ಯಲ್ಲಿ ಕಿಡ್ನಿ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವ ಅಮರ್ ಸಿಂಗ್ ಅವರ ಆರೋಗ್ಯದ ಬಗ್ಗೆ ವೈದ್ಯಕೀಯ ವರದಿ ಸಲ್ಲಿಸುವಂತೆ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಏಮ್ಸಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಲಾಯಿತು. ಅ.12ರ ಒಳಗೆ ಅಮರ್ ಸಿಂಗ್ ಆರೋಗ್ಯದ ಕುರಿತು ವರದಿ ಸಲ್ಲಿಸುವಂತೆಯೂ ತಾಕೀತು ಮಾಡಲಾಯಿತು.
ಸೆ. 28ರಂದು ದೆಹಲಿ ನ್ಯಾಯಾಲಯ ಅಮರ್ ಸಿಂಗ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಆದರೂ ಸಹ 55 ವರ್ಷದ ಅಮರ್ಸಿಂಗ್ ಏಮ್ಸನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೋಟಿಗಾಗಿ ನೋಟು ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಅಮರ್ಸಿಂಗ್ ಅವರನ್ನು ದೆಹಲಿ ಪೊಲೀಸರು ಸೆ.6ರಂದು ಬಂಧಿಸಿದ್ದರು.