ಚಾಮರಾಜನಗರ: ಜಿಲ್ಲೆಯಲ್ಲಿ ಅರಿಸಿನ ಬೆಲೆ ಕುಸಿತದಿಂದ ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದ್ದು, ಬೆಂಬಲ ಬೆಲೆ ನಿಗದಿಗೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳ ಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕ ಒತ್ತಾಯಿಸಿದೆ.
ಮಂಗಳವಾರ ನಗರಕ್ಕೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಕಾರ್ಯ ದರ್ಶಿ ಪ್ರದೀಪ್ಸಿಂಗ್ ಖರೋಲ ಅವರನ್ನು ನಿಯೋಗದ ಮೂಲಕ ಭೇಟಿ ಮಾಡಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಕೂಡಲೇ, ಅರಿಸಿನಕ್ಕೆ ಸೂಕ್ತ ಬೆಲೆ ನಿಗದಿ ಮಾಡಬೇಕು. ಇಲ್ಲವಾದರೆ ಬೆಳೆಗಾರರು ತೊಂದರೆ ಅನುಭವಿಸಲಿದ್ದಾರೆ. ಸರ್ಕಾರದೊಂದಿಗೆ ಈ ಕುರಿತು ಚರ್ಚಿಸಬೇಕು ಎಂದು ನಿಯೋಗ ಒತ್ತಾಯಿಸಿತು.
ಕಬಿನಿ ನದಿ ಮೂಲದಿಂದ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಲು ಕ್ರಮಕೈಗೊಳ್ಳಬೇಕು. ಬೇಸಿಗೆ ವೇಳೆ ವಿದ್ಯುತ್ ಸಮಸ್ಯೆ ಉಲ್ಬಣಿಸಲಿದೆ. ಅಗತ್ಯವಿರುವೆಡೆ ವಿದ್ಯುತ್ ಪರಿವರ್ತಕ ಅಳವಡಿಕೆ ಮತ್ತು ಸಮಸ್ಯೆ ಬಗೆಹರಿಸಲು ಕ್ರಮವಹಿಸಬೇಕು ಎಂದು ಮನವಿ ಮಾಡಿತು.
ಬರಗಾಲಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸಲು ತಕ್ಷಣ ಕ್ರಮಕೈಗೊಳ್ಳಬೇಕು. ಜಿಲ್ಲೆಯ ರೈತರು ಅನುಭವಿಸುತ್ತಿರುವ ಸಂಕಷ್ಟ ಪರಿಹರಿಸಲು ಸರ್ಕಾರದೊಂದಿಗೆ ಚರ್ಚಿಸಬೇಕು. ಇಲ್ಲವಾದರೆ ಹೋರಾಟ ನಡೆಸುವುದು ಅನಿವಾರ್ಯ ಎಂದು ನಿಯೋಗ ಮನವಿ ಸಲ್ಲಿಸಿತು.
ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಂ. ಮಹೇಶ್ಪ್ರಭು, ತಾಲ್ಲೂಕು ಘಟಕದ ಅಧ್ಯಕ್ಷ ಸಿ. ಸಿದ್ದರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ರಮೇಶ್, ಆರ್. ಶಿವಾನಂದ್, ಸಂತೋಷ್, ಶಾಂತಮಲ್ಲಪ್ಪ, ನಂಜುಂಡಸ್ವಾಮಿ, ಬಾಬು, ಬಸವಣ್ಣ, ಕೆ.ಪಿ. ಶಿವಸ್ವಾಮಿ ಇತರರು ನಿಯೋಗದಲ್ಲಿದ್ದರು.