ಬೀದರ್: ಎಲ್ಲ ಕಾಲೇಜುಗಳ ಡಿಪ್ಲೊಮಾ ಇನ್ ಜಿ.ಎನ್.ಎಂ. ಪರೀಕ್ಷೆಗಳನ್ನು ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿಯೇ ನಡೆಸಬೇಕು ಎಂದು ಒತ್ತಾಯಿಸಿ ಕನ್ನಡ ಸಮರ ಸೇನೆ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಲ್ಲಿ ಟೈರ್ಗೆ ಬೆಂಕಿ ಹಚ್ಚಿದರು.
ಜಿಲ್ಲೆಯಲ್ಲಿ ಆರಂಭದಿಂದಲೂ ನರ್ಸಿಂಗ್ ಪರೀಕ್ಷೆಗಳು ಅಕ್ರಮವಾಗಿ ನಡೆಯುತ್ತಿದ್ದು, ಈ ಬಗ್ಗೆ ಸಚಿವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರದಲ್ಲಿ ಆಪಾದಿಸಿದ್ದಾರೆ.
ಜಿಲ್ಲೆಯ 38 ನರ್ಸಿಂಗ್ ಕಾಲೇಜುಗಳ ಪೈಕಿ ಕೆಲ ಕಾಲೇಜು ವಿದ್ಯಾರ್ಥಿಗಳು ಮಾತ್ರ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಇನ್ನುಳಿದ ಕಾಲೇಜು ಆಡಳಿತ ಮಂಡಳಿಗಳು ತಮ್ಮ ಕಾಲೇಜಿನಲ್ಲಿಯೇ ಪರೀಕ್ಷೆ ನಡೆಯುವಂತೆ ನೋಡಿಕೊಂಡಿವೆ ಎಂದು ಆರೋಪಿಸಿದ್ದಾರೆ.
ನರ್ಸಿಂಗ್ ಪರೀಕ್ಷಾ ಮಂಡಳಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿಯೇ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಂಡಿತ್ತು. ಆದರೆ, ಪರೀಕ್ಷೆಗೆ ಒಂದು ದಿನ ಮುಂಚೆ ಪರೀಕ್ಷಾ ಕೇಂದ್ರಗಳು ಬದಲಾದದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಸೋಮವಾರ ನಡೆದ ಡಿಪ್ಲೋಮಾ ಇನ್ ಜಿ.ಎನ್.ಎಂ. ಪರೀಕ್ಷೆ ಪಾರದರ್ಶಕವಾಗಿ ನಡೆದಿಲ್ಲ. ಹೀಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಹೊರತುಪಡಿಸಿ ಇತರೆ ಕೇಂದ್ರಗಳಲ್ಲಿ ನಡೆದ ಪರೀಕ್ಷೆಗಳನ್ನು ರದ್ದುಪಡಿಸಬೇಕು. ಹಾಗೂ ವೈದ್ಯಕೀಯ ಕಾಲೇಜಿನಲ್ಲೇ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಪರೀಕ್ಷಾ ಅಕ್ರಮದ ಕುರಿತು ಸಿ.ಬಿ.ಐ. ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಸೇನೆ ಜಿಲ್ಲಾ ಅಧ್ಯಕ್ಷ ಅವಿನಾಶ್ ದೀನೆ, ಕಾರ್ಯಾಧ್ಯಕ್ಷ ಸಾಯಿ ಶಿಂಧೆ, ಉಪಾಧ್ಯಕ್ಷ ಪ್ರಭು ಮದರ್ಗಿಕರ್, ತಾಲ್ಲೂಕು ಅಧ್ಯಕ್ಷ ಸಂಜು ಲಕ್ಷ್ಮಿದೊಡ್ಡಿ, ನಗರ ಅಧ್ಯಕ್ಷ ಹರ್ಷವರ್ಧನ್ ವಾಲ್ದೊಡ್ಡಿ, ಪ್ರಮುಖ ರಾದ ಕಲ್ಯಾಣರಾವ್ ಗುನ್ನಳ್ಳಿಕರ್, ಪ್ರಭು, ರವೀಂದ್ರ ಇತರರ ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು.