ಬೆಂಗಳೂರು: ಕೇಂದ್ರ ಸರ್ಕಾರ ಅಲ್ಪಸಂಖ್ಯಾತರಿಗೆ ಶೇ 4.5ರಷ್ಟು ಮೀಸಲಾತಿ ನೀಡುವುದರಿಂದ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗಲಿದ್ದು, ಇದನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಪಿ.ಸಿ.ಮೋಹನ್ ತಿಳಿಸಿದರು.
ನಗರದ ಅರಮನೆ ಮೈದಾನದಲ್ಲಿ ಶುಕ್ರವಾರ ಹಿಂದುಳಿದ ವರ್ಗಗಳ ಮುಖಂಡರ ಸಭೆ ನಡೆಯಲಿದ್ದು, ರಾಜ್ಯದಾದ್ಯಂತ ಹೋರಾಟ ನಡೆಸುವ ಬಗ್ಗೆ ಚರ್ಚಿಸಲಾಗುವುದು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಹಿಂದುಳಿದ ವರ್ಗದವರಿಗೆ ನೀಡುತ್ತಿರುವ ಶೇ 27ರ ಮೀಸಲಾತಿಯಲ್ಲೇ ಅಲ್ಪಸಂಖ್ಯಾತರಿಗೆ ಶೇ 4.5ರಷ್ಟು ಮೀಸಲಾತಿ ನೀಡುವುದನ್ನು ಬಿಜೆಪಿ ವಿರೋಧಿಸುತ್ತದೆ. ಪರಿಸ್ಥಿತಿ ಕೈಮೀರುವ ಮೊದಲೇ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಇದರ ವಿರುದ್ಧ ರಾಷ್ಟ್ರಪತಿಗೆ ದೂರು ನೀಡುವುದರ ಜೊತೆಗೆ ತಜ್ಞರ ಸಲಹೆ ಪಡೆದು ಕಾನೂನು ಹೋರಾಟ ಕೈಗೊಳ್ಳುವ ದೃಷ್ಟಿಯಿಂದ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಹೇಳಿದರು.