ಕೆಜಿಎಫ್: ಅಂಗನವಾಡಿ ಕೇಂದ್ರಕ್ಕೆ ಪೂರೈಸಲಾಗುವ ಆಹಾರ ಮತ್ತು ಇತರೆ ವಸ್ತು ಖರೀದಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ತನಿಖೆಗೆ ಆಗ್ರಹಿಸಿ ಸೋಮವಾರ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಬಂಗಾರಪೇಟೆ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು.
ತಾಲ್ಲೂಕಿನಲ್ಲಿ 515 ಅಂಗನವಾಡಿ ಕೇಂದ್ರಗಳಿದ್ದು, ಬಹಳಷ್ಟು ಅಂಗನವಾಡಿ ಕೇಂದ್ರಗಳಿಗೆ ಕಟ್ಟಡಗಳೇ ಇಲ್ಲ. ಮಿಕ್ಕ ಕೆಲವು ಶಿಥಿಲಾವಸ್ಥೆಯಲ್ಲಿವೆ.
ಅಂಗನವಾಡಿ ಕೇಂದ್ರಗಳಿಗೆ ಪೂರೈಸಿದ ವಸ್ತುಗಳು ಕಳಪೆ ಗುಣಮಟ್ಟದ್ದಾಗಿವೆ. ಈ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಶಾಮೀಲಾ ಗಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬೇಡಿಕೆ ಈಡೇರದಿದ್ದರೆ ಅನಿರ್ಧಿಷ್ಟಕಾಲದ ಸತ್ಯಾಗ್ರಹ ಆರಂಭಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಮುಖಂಡರಾದ ಅಣ್ಣಾದೊರೈ, ಸಿ.ಜೆ.ನಾಗರಾಜ್, ರಾಜಪ್ಪ, ಎಂ.ರಾಮನ್ ಧರಣಿಯ ನೇತೃತ್ವ ವಹಿಸಿದ್ದರು.