ತುಮಕೂರು: ಕೆಲವು ಸಚಿವರ ಅಸಮರ್ಥತೆ ಬಗ್ಗೆ ರಾಜ್ಯಪಾಲರು ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿ, ಕಬ್ಬು ಬೆಳೆಗಾರರ ಹಿತ ಕಾಯಲು ಸರ್ಕಾರ ಬದ್ಧವಾಗಿದ್ದು, ಸರ್ಕಾರದ ಆದೇಶ ಪಾಲಿಸದಿದ್ದರೆ ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಕ್ರಮಕೈಗೊಳ್ಳುವುದು ಅನಿವಾರ್ಯವಾಗಲಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದರು.
ಎಸ್.ಆರ್.ಹಿರೇಮಠ ಅವರು ಜನಪ್ರತಿನಿಧಿಗಳ ವಿರುದ್ಧ ಎಲ್ಲೇಮೀರಿ ಮಾತನಾಡುತ್ತಿದ್ದಾರೆ. ಜನಪ್ರತಿನಿಧಿಗಳ ವಿರುದ್ಧ ಆರೋಪ ಮಾಡಲಿ. ಆದರೆ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಡಿ. 15ರಂದು ಬೆಂಗಳೂರಿಗೆ ಆಗಮಿಸುವ ರಾಜ್ಯ ಉಸ್ತುವಾರಿ ದಿಗ್ವಿಜಯ ಸಿಂಗ್ ಅವರಿಗೆ ಸಲ್ಲಿಸಲಾಗುವುದು ಎಂದರು.