ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಮರ್ಪಕ ನೀರು ಪೂರೈಕೆ ರೊಚ್ಚಿಗೆದ್ದ ಜನತೆಯಿಂದ ಕಚೇರಿ ಗಾಜು ಪುಡಿ .

Last Updated 21 ಮಾರ್ಚ್ 2011, 19:30 IST
ಅಕ್ಷರ ಗಾತ್ರ

 ರಾಮನಗರ: ನಗರದ 20 ವಾರ್ಡ್‌ಗಳ ಜನರಿಗೆ ಕಳೆದ ಹತ್ತು ದಿನಗಳಿಂದ ಸಮರ್ಪಕ ನೀರು ಪೂರೈಕೆ ಮಾಡದ ಜಲಮಂಡಳಿ ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದ ಜನರು ಕಚೇರಿಯ ಗಾಜುಗಳನ್ನು ಪುಡಿಪುಡಿ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆಯಿತು. ನಗರಸಭೆಯ ವಾಣಿಜ್ಯ ಸಂಕೀರ್ಣದಲ್ಲಿರುವ ಜಲಮಂಡಳಿ ಕಚೇರಿಗೆ ನಗರಸಭಾ ಸದಸ್ಯ ನಿಜಾಮ್ ಪಾಷ ಅವರು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ನೀರು ಸರಬರಾಜು ಮಾಡದ ಜಲಮಂಡಳಿಗೆ ಧಿಕ್ಕಾರ ಕೂಗಿದರು. ಅಧಿಕಾರಿಗಳ ಜತೆ ತಳ್ಳಾಟ, ನೂಕಾಟ ನಡೆಯಿತು. ಕೆಲ ದುಷ್ಕರ್ಮಿಗಳು ಕಚೇರಿಯ ಗಾಜುಗಳನ್ನು ಒಡೆದು ಪ್ರತಿಭಟಿಸಿದರು.

ಕಳೆದ ಹತ್ತು ದಿನಗಳಿಂದ ನಗರದಲ್ಲಿ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ. ಹೀಗೆ ಜನರು ನೀರಿಗಾಗಿ ಹಾಹಾಕಾರ ಪಡುತ್ತಿದ್ದರೂ ಜಲಮಂಡಳಿ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತಾಳುತ್ತಿದ್ದಾರೆ ಎಂದು ಅವರು ದೂರಿದರು.21ನೇ ವಾರ್ಡಿನ ನಗರಸಭಾ ಸದಸ್ಯ ಶಿವಕುಮಾರಸ್ವಾಮಿ ಮಾತನಾಡಿ, ‘ಶಾಸಕರು, ಸರ್ಕಾರಿ ಅಧಿಕಾರಿಗಳು ಇರುವ 25 ರಿಂದ 28 ವಾರ್ಡ್‌ಗಳವರೆಗೆ ಸಮೃದ್ಧವಾಗಿ ನೀರು ಸರಬರಾಜಾಗುತ್ತದೆ. ಆದರೆ ಸಾಮಾನ್ಯ ಜನರು ವಾಸಿಸುವ 1ರಿಂದ 25 ವಾರ್ಡ್‌ವರೆಗೆ ನೀರಿಲ್ಲದೆ ನರಕಯಾತನೆ ಅನುಭವಿಸುವಂತಾಗಿದೆ ಎಂದು ಕಿಡಿಕಾರಿದರು.
 

ನಗರದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಳ್ಳಲು ಕೊಳವೆ ಬಾವಿಗಳ ಮುಖಾಂತರ ಮಿನಿ ಟ್ಯಾಂಕುಗಳಿಗೆ ಸರಬರಾಜಾಗುತ್ತಿದ್ದ ನೀರಿನ ವ್ಯವಸ್ಥೆಯನ್ನು ಜಲಮಂಡಳಿ ಅಧಿಕಾರಿಗಳು ಏಕಾಏಕಿ ರದ್ದುಪಡಿಸಿರುವುದು ಕಾರಣ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. 31 ವಾರ್ಡ್‌ಗಳಿಗೂ ಕಾವೇರಿ ನೀರು ಸರಬರಾಜು ಮಾಡಲಾಗುವುದು ಎಂದು ಸುಳ್ಳು ಭರವಸೆ ನೀಡಿ ಜನರನ್ನು ವಂಚಿಸುತ್ತಿದ್ದಾರೆ ಎಂದರು.ನಂತರ ನಗರಸಭೆ ಅಧ್ಯಕ್ಷ ಸಾಬಾನ್ ಸಾಬ್, ಉಪಾಧ್ಯಕ್ಷ ಬಿ.ಉಮೇಶ್, ಮಾಜಿ ಅಧ್ಯಕ್ಷ ಕೆ.ಶೇಷಾದ್ರಿ, ಆಯುಕ್ತ ಸಿದ್ಧರಾಜು ಆಗಮಿಸಿ ಮಂಗಳವಾರ ನಗರಸಭೆಯ ತುರ್ತು ಸಭೆ ಕರೆಯಲಾಗಿದ್ದು, ನಗರದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ನಂತರ ಪ್ರತಿಭಟನಾಕಾರರು ಹಿಂದಿರುಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT