ಧಾಕ್ವಖಾನಾ, ಅಸ್ಸಾಂ (ಪಿಟಿಐ): ಕಳೆದ ಹತ್ತು ವರ್ಷಗಳಲ್ಲಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದ ಮುಖ್ಯಮಂತ್ರಿ ತರುಣ್ ಗೊಗೋಯ್ ಅವರನ್ನು ಪ್ರಧಾನಿ ಮನಮೋಹನ್ ಸಿಂಗ್ ಕೂಡಾ ಶನಿವಾರ ಪ್ರಶಂಸಿಸಿದ್ದಾರೆ.
“ಹತ್ತು ವರ್ಷಗಳ ಹಿಂದಿದ್ದ ಪರಿಸ್ಥಿತಿಯನ್ನು ಸಂಪೂರ್ಣ ಬದಲಿಸುವ ರೀತಿಯಲ್ಲಿ ರಾಜ್ಯದಲ್ಲಿ ತೀವ್ರಗತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವುದಕ್ಕಾಗಿ ಗೊಗೋಯ್ ಅವರನ್ನು ಅಭಿನಂದಿಸುತ್ತೇನೆ” ಎಂದು ಅವರು ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಶಾಂತಿ ನೆಲೆಸಿದಾಗ ಮಾತ್ರ ಅಭಿವೃದ್ಧಿ ಸಾಧಿಸುವುದು ಸಾಧ್ಯ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಂಡು, ಜನರ ನಿರೀಕ್ಷೆಗಳನ್ನು ಪೂರೈಸಲು ಪ್ರಯತ್ನಿಸುತ್ತಿವೆ. ಪ್ರಾದೇಶಿಕ ಮತ್ತು ಗುಡ್ಡಗಾಡು ಮಂಡಳಿಗಳ ಮೂಲಕ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿವೆ ಎಂದ ಅವರು, ಬೋಡೊಲ್ಯಾಂಡ್ ಪ್ರಾದೇಶಿಕ ಮಂಡಳಿಗೆ ರೂ 250 ಕೋಟಿಗಳ ವಿಶೇಷ ಅಭಿವೃದ್ಧಿ ಪ್ಯಾಕೇಜ್ ನೀಡುವುದಾಗಿಯೂ ಪ್ರಕಟಿಸಿದರು.