ಮೈಸೂರು: `ಅಹಿಂದ ಮೂಲಕ ರಾಜಕಾರಣಕ್ಕೆ ಹೊಸರೂಪ ಕೊಡಬೇಕು ಎಂಬ ಆಲೋಚನೆ ಇದೆ. ಬಹುಜನ ವಿದ್ಯಾರ್ಥಿ ಸಂಘದ ಎಲ್ಲರೂ ಇದಕ್ಕೆ ಬೆಂಬಲ ನೀಡಬೇಕು~ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್ ಮನವಿ ಮಾಡಿದರು.
ಬಹುಜನ ವಿದ್ಯಾರ್ಥಿ ಸಂಘದ ದಶಮಾನೋತ್ಸವದ ಅಂಗವಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದವರನ್ನು ಎಲ್ಲ ಪಕ್ಷಗಳೂ ಮತ ಬ್ಯಾಂಕ್ ಆಗಿ ಬಳಸಿಕೊಂಡಿವೆ. ವಿಧಾನಸಭೆ ಮತ್ತು ಸಂಸತ್ತಿನಲ್ಲಿ ದಲಿತರ ಪರವಾಗಿ ದನಿ ಎತ್ತುವ ಸಚಿವರೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಅಹಿಂದ ಮೂಲಕ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಲು ತೀರ್ಮಾನಿಸಲಾಗಿದೆ~ ಎಂದು ಹೇಳಿದರು.
ನವದೆಹಲಿಯ ಇಗ್ನೋ ಅಂಬೇಡ್ಕರ್ ಅಧ್ಯಯನ ಕೇಂದ್ರದ ಮುಖ್ಯಸ್ಥೆ ಡಾ.ಗೇಲ್ ಆಮ್ವೆಡ್ಜ್ ಮಾತನಾಡಿ, ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಸಮಾಜದಲ್ಲಿನ ಅಂಕಡೊಂಕು ತಿದ್ದಲು, ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಮುಂದಾಗಬೇಕು~ ಎಂದು ತಿಳಿಸಿದರು.
ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 15 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.