ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಭಾರತ - ಪಾಕ್ ಕ್ರಿಕೆಟ್ ಪಂದ್ಯದ ಬಳಿಕ ಮನೆಗೆ ತೆರಳುತ್ತಿದ್ದ ವೇಳೆ ಕ್ರಿಕೆಟ್ ಪ್ರೇಮಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ನಗರದ ಮಾಗಡಿ ರಸ್ತೆಯ ನಿವಾಸಿ ಕಮಲ್ ಜೈನ್ (46) ಸಾವನ್ನಪ್ಪಿದವರು. ಒಡಿಶಾ ಮೂಲದ ಕಮಲ್ ಜೈನ್ ಕೆಲ ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದರು. ಲಾಲ್ಬಾಗ್ ರಸ್ತೆಯ ಖಾಸಗಿ ಕಂಪೆನಿಯೊಂದರಲ್ಲಿ ಅವರು ಉದ್ಯೋಗಿಯಾಗಿದ್ದರು. ತಮ್ಮ ಕುಟುಂಬದೊಂದಿಗೆ ಅವರು ಪಂದ್ಯ ವೀಕ್ಷಿಸಲು ಬಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಪಂದ್ಯ ಮುಗಿದ ನಂತರ ಕ್ರೀಡಾಂಗಣದಿಂದ ಹೊರಬರುತ್ತಿದ್ದಾಗ ಅವರು ಕುಸಿದುಬಿದ್ದರು. ಕ್ರೀಡಾಂಗಣದ ವೈದ್ಯರು ಅವರಿಗೆ ಪ್ರಥಮ ಚಿಕಿತ್ಸೆ ನೀಡಿದರು. ನಂತರ ಅಸ್ವಸ್ಥಗೊಂಡಿದ್ದ ಅವರನ್ನು ಮಲ್ಯ ಆಸ್ಪತ್ರೆಗೆ ಸಾಗಿಸಲಾಯಿತು. ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ. ಭಾರತ ತಂಡ ಪಾಕ್ ವಿರುದ್ಧದ ಪಂದ್ಯದಲ್ಲಿ ಸೋತ ಕಾರಣದಿಂದ ಅವರಿಗೆ ಆಘಾತವಾಗಿರುವ ಸಾಧ್ಯತೆ ಇದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.