ಶ್ರೀರಂಗಪಟ್ಟಣ: ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರಕಾರದ ಕ್ರಮ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಶ್ರೀರಂಗಪಟ್ಟಣದಲ್ಲಿ ಬುಧವಾರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಮಂಡ್ಯ ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನಾಕಾರರು ಯುಪಿಎ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು.
ಕೇಂದ್ರ ಸರಕಾರ ಅಡುಗೆ ಅನಿಲ ಸಿಲಿಂಡರ್ ಒಂದಕ್ಕೆ ₨ 220 ರೂ ಬೆಲೆ ಏರಿಸುವ ಮೂಲಕ ಜನ ಸಾಮಾನ್ಯರ ಮೇಲೆ ಬರೆ ಎಳೆದಿದೆ. ನಗರ ಪ್ರದೇಶಗಳಲ್ಲಿ ವಾಸಿಸುವ ಕೂಲಿ ಕೂಲಿ ಕಾರ್ಮಿಕರು ಸಿಲಿಂಡರ್ ಬಳಸಿಯೇ ನಿತ್ಯ ಅಡುಗೆ ತಯಾರಿಸಬೇಕು. ಬೆಲೆ ಏರಿಕೆಯಿಂದ ಹಿಂದುಳಿದಿರುವ ಜನರು ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯಿಂದಾಗಿ ತತ್ತರಿಸಿದ್ದಾರೆ ಎಂದು ಆರೋಪಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಟಿ. ಶ್ರೀಧರ್, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಎಸ್. ದೇವರಾಜು, ಪ್ರಧಾನ ಕಾರ್ಯದರ್ಶಿ ಎಸ್.ಕೆ. ಮಂಜುನಾಥ್, ಪುರಸಬೆ ಮಾಜಿ ಅಧ್ಯಕ್ಷ ಕೆ. ಬಲರಾಂ, ಮಾಜಿ ಸದಸ್ಯ ಜಯಲಕ್ಷ್ಮಿ, ಮಹಿಳಾ ಮೋರ್ಚಾ ಮುಖಂಡರಾದ ವಿದ್ಯಾಶ್ರೀ, ದೇವಿರಮ್ಮ, ರಾಜೇಶ್ವರಿ, ನಗರ ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ, ಯುವ ಮೋರ್ಚಾ ಅಧ್ಯಕ್ಷ ಗಿರೀಶ್ ಇತರರು ಇದ್ದರು.