ನವದೆಹಲಿ (ಪಿಟಿಐ): ಯುಪಿಎ ಸರ್ಕಾವು ಆತ್ಮಹತ್ಯಾ ಮಾರ್ಗದಲ್ಲಿ ಸಾಗುತ್ತಿದೆ. ಸ್ವಾತಂತ್ರ್ಯಾ ನಂತರ ಇಂತಹ ಪರಿಸ್ಥಿತಿ ಎಂದೂ ಉದ್ಭವಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಪಕ್ಷದ ಸದಸ್ಯರು ಗಡುವು ಪೂರ್ವ ಚುನಾವಣೆಗಳಿಗೆ ಸಜ್ಜಾಗಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರು ಶನಿವಾರ ಪಕ್ಷ ಕಾರ್ಯಕರ್ತರಿಗೆ ಕರೆ ನೀಡಿದರು.
ಇಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಕಾಲದಲ್ಲಿ ಪಕ್ಷ ಪದಾಧಿಕಾರಿಗಳ ಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಸರ್ಕಾರ ನಿಷ್ಕ್ರಿಯವಾಗಿದೆ. ಜನ ಸರ್ಕಾರದ ಬಗ್ಗೆ ಭ್ರಮನಿರಸನಗೊಂಡಿದ್ದಾರೆ ಎಂದು ಅವರು ಹೇಳಿದರು.
ದಕ್ಷ ಆಡಳಿತ ಮತ್ತು ಸ್ವಚ್ಛ ರಾಜಕಾರಣಕ್ಕಾಗಿ ಆಗ್ರಹಿಸಿ ಅಕ್ಟೋಬರ್ 11ರಿಂದ ರಾಷ್ಟ್ರವ್ಯಾಪಿ ರಥಯಾತ್ರೆ ಕೈಗೊಳ್ಳಲು ಸಜ್ಜಾಗಿರುವ ಅಡ್ವಾಣಿ ಅವರು ಭ್ರಷ್ಟಾಚಾರ ಮತ್ತು ಬೆಲೆ ಏರಿಕೆ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶ್ರಮ ವಹಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.