ಕುಶಾಲನಗರ: ಸರ್ಕಾರದಿಂದ ಆದಿವಾಸಿಗಳ ಅಭಿವೃದ್ಧಿಗಾಗಿ ಬಿಡುಗಡೆಯಾಗುತ್ತಿರುವ ಕೋಟಿ ಕೋಟಿ ಅನುದಾನಗಳನ್ನು ಕೆಲವು ಸಂಸ್ಥೆಗಳು ಪಡೆದು, ಅರ್ಹರಿಗೆ ಸರಿಯಾಗಿ ತಲುಪಿಸುತ್ತಿಲ್ಲ ಎಂದು ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ
ಎಂ. ಕೃಷ್ಣಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ವತಿಯಿಂದ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಭಾನುವಾರ ನಡೆದ ಗಿರಿಜನರ ಸಮಗ್ರ ಅಭಿವೃದ್ಧಿ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.
ಆದಿವಾಸಿಗಳ ಅಭಿವೃದ್ಧಿಗಾಗಿ ಸರ್ಕಾರಗಳಿಂದ ಮತ್ತು ವಿದೇಶಗಳಿಂದ ಬಿಡುಗಡೆಯಾಗುತ್ತಿರುವ ಅನುದಾನಗಳು ಅರ್ಹರಿಗೆ ಸರಿಯಾಗಿ ತಲುಪಲು ರಾಜಕಾರಣಿಗಳ ಮತ್ತು ಅಧಿಕಾರಿಗಳ ಪರಿಶ್ರಮ ಅಗತ್ಯ ಎಂದರು.
ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಎನ್. ರಾಜಾರಾವ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯ ಎರವ, ಕುಡಿಯ, ಕೊರಗ, ಪಣಿಯ, ಬೆಟ್ಟಕುರುಬ ಸೇರಿದಂತೆ ವಿವಿಧ ಆದಿವಾಸಿ ಸಮುದಾಯಗಳ ಮುಖಂಡರು ಭಾಗವಹಿಸಿದ್ದರು.
ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಸಂಘಟನಾ ಕಾರ್ಯದರ್ಶಿ ಕಾವೇರಾ, ಬೆಂಗಳೂರು ಜಿಲ್ಲಾಧ್ಯಕ್ಷ ಎಂ. ಶ್ರೀರಾಮ್, ಮೈಸೂರು ಜಿಲ್ಲಾಧ್ಯಕ್ಷ ವಿಜಯ್ಕುಮಾರ್, ಕಾರ್ಯದರ್ಶಿ ಮಧುಕುಮಾರ್, ರಾಜ್ಯ ಉಪಾಧ್ಯಕ್ಷ ಪುಷ್ಕರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.