ಬೆಂಗಳೂರು: ವರ್ಷ ಕಳೆದರೂ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳಿಗೆ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದವರಿಗೆ ನೇಮಕಾತಿ ಪತ್ರ ನೀಡಿಲ್ಲ. ಇದರಿಂದ ಅಭ್ಯರ್ಥಿಗಳಿಗೆ ಸಾಕಷ್ಟು ಸಮಸ್ಯೆಯಾಗಿದ್ದು, ಕೂಡಲೇ ಆದೇಶ ಪತ್ರ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ, ನೂರಾರು ಅಭ್ಯರ್ಥಿಗಳು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಮೇ 2009ರಲ್ಲಿ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆ, ಬೆರಳಚ್ಚು ಪೊಲೀಸ್ ಕಾನ್ಸ್ಟೇಬಲ್ ಮತ್ತು ವೈರ್ಲೆಸ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿ ದೈಹಿಕ ಪರೀಕ್ಷೆ, ಸಿಇಟಿ ಪರೀಕ್ಷೆ ಎಲ್ಲವನ್ನೂ ಪೂರ್ಣಗೊಳಿಸಲಾಗಿದೆ. 4 ಸಾವಿರಕ್ಕಿಂತ ಅಧಿಕ ಅಭ್ಯರ್ಥಿಗಳಲ್ಲಿ ಕೆಲವೇ ನೂರು ಮಂದಿಗೆ ನೇಮಕಾತಿ ಪತ್ರ ನೀಡಲಾಗಿದೆ.
ಉಳಿದವರಿಗೆ ವಿತರಿಸಿಲ್ಲ. ಅಲ್ಲದೇ ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ಮೂಲ ಪ್ರಮಾಣಪತ್ರಗಳನ್ನು ಇಲಾಖೆ ತನ್ನ ಬಳಿಯೇ ಉಳಿಸಿಕೊಂಡಿದೆ.
ಇದರಿಂದ ಬೇರೆ ಹುದ್ದೆಗೆ ಅರ್ಜಿ ಹಾಕುವುದೂ ಅಸಾಧ್ಯವಾಗಿದೆ ಎಂದು ಮೈಸೂರು, ಮಂಡ್ಯ, ಹಾಸನ, ಹಾವೇರಿ, ವಿಜಾಪುರ ಜಿಲ್ಲೆಗಳಿಂದ ಆಗಮಿಸಿದ್ದ ಅಭ್ಯರ್ಥಿಗಳು ಇಲಾಖೆಯ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಸ್ವಾತಂತ್ರ್ಯ ಉದ್ಯಾನವನಕ್ಕೆ ಆಗಮಿಸಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ ನೀಲಂ ಅಚ್ಯುತರಾವ್ ಅವರಿಗೆ ಮನವಿ ಸಲ್ಲಿಸಿದರು.