ಬೆಂಗಳೂರು: `ತಮಿಳುನಾಡಿಗೆ ನೀರು ಬಿಡಬೇಕು ಎಂದು ಕಾವೇರಿ ನದಿ ಪ್ರಾಧಿಕಾರ (ಸಿಆರ್ಎ) ನೀಡಿರುವ ಆದೇಶ ಪುನರ್ ಪರಿಶೀಲಿಸುವ ಪೂರ್ಣ ಅಧಿಕಾರ, ಪ್ರಾಧಿಕಾರದ ಅಧ್ಯಕ್ಷರೂ ಆದ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಇದೆ. ಅವರು ತಮ್ಮ ಆದೇಶವನ್ನು ಕೂಡಲೇ ಪುನರ್ ಪರಿಶೀಲಿಸಬೇಕು~ ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಬುಧವಾರ ಇಲ್ಲಿ ಆಗ್ರಹಪಡಿಸಿದರು.
ಕೇಂದ್ರ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷರಾಗಿರುವ ಕಾವೇರಿ ಉಸ್ತುವಾರಿ ಸಮಿತಿ (ಸಿಎಂಸಿ) ಗುರುವಾರ ದೆಹಲಿಯಲ್ಲಿ ಸಭೆ ಸೇರಲಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ಅವರು ಹಿರಿಯ ಅಧಿಕಾರಿಗಳ ಜೊತೆ ಬೆಂಗಳೂರಿನಲ್ಲಿ ಸಭೆ ನಡೆಸಿದರು.