ಚಿತ್ರದುರ್ಗ: ಆಮಿಷಗಳಿಗೆ ಬಲಿಯಾಗದೆ ಪ್ರಜ್ಞಾವಂತಿಕೆಯಿಂದ ಮತ ಚಲಾಯಿಸಿದರೆ ಮಾತ್ರ ಸದೃಢವಾದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶ್ರೀನಿವಾಸ್ ಹರೀಶ್ಕುಮಾರ್ ಅಭಿಪ್ರಾಯಪಟ್ಟರು.
ತರಾಸು ರಂಗಮಂದಿರದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣೆಯಲ್ಲಿ ಯಾವುದೇ ವಸ್ತುಗಳಿಗೆ ಮಾರು ಹೋಗಿ ಮತವನ್ನು ಮಾರಾಟ ಮಾಡಿಕೊಳ್ಳಬಾರದು. ವಿವೇಚನಾ ಶಕ್ತಿಯಿಂದ ಮತ ಚಲಾಯಿಸಬೇಕು. ಈ ಹಿಂದೆ `ಯಥಾ ರಾಜ, ತಥಾ ಪ್ರಜಾ~ ಎನ್ನುವ ಸ್ಥಿತಿ ಇತ್ತು. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ `ಯಥಾ ಪ್ರಜಾ, ತಥಾ ರಾಜಾ~ ಎನ್ನುವುದನ್ನು ಅರಿತುಕೊಳ್ಳಬೇಕು. ಚುನಾವಣೆ ಎನ್ನುವುದು ಅಭಿಪ್ರಾಯ ಸಂಗ್ರಹಣೆ ಕಾರ್ಯ. ಉತ್ತಮ ಆಡಳಿತಗಾರರನ್ನು ಆಯ್ಕೆ ಮಾಡುವುದು ಇದರ ಉದ್ದೇಶ.
ಆದರೆ, ಕಳೆದ ಎರಡು ದಶಕಗಳಲ್ಲಿ ಹಣ ಮತ್ತು ತೋಳ್ಬಲದ ಪ್ರದರ್ಶನವೇ ಹೆಚ್ಚಾಗಿ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿ ಚುನಾವಣೆಗಳು ನಡೆಯುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಜಯರಾಂ ಮಾತನಾಡಿ, ದೇಶದ 4 ಸಾವಿರ ಶಾಸಕರಲ್ಲಿ 1,500 ಶಾಸಕರು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ. ಇಂತಹವರನ್ನು ಆಯ್ಕೆ ಮಾಡಿ ಜನ ಏನು ಬಯಸುತ್ತಿದ್ದಾರೆ ಎಂದು ಪ್ರಶ್ನಿಸಿದರು.