ನವದೆಹಲಿ (ಪಿಟಿಐ): ವಾರ್ಡ್ವಾರು ಮತ ಎಣಿಕೆ ನಿಲ್ಲಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಚುನಾವಣಾ ಆಯೋಗದಿಂದ ಸೋಮವಾರ ಪ್ರತಿಕ್ರಿಯೆ ಕೇಳಿದೆ.
ದೀಪಕ್ ಮಿಶ್ರಾ ಮತ್ತು ಎನ್.ವಿ. ರಮಣ ಅವರ ನೇತೃತ್ವದ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠವು, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿ ಮೇ 21ರ ಒಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
‘ಲೋಕಸಭಾ ಕ್ಷೇತ್ರದ ಫಲಿತಾಂಶವನ್ನು ಒಂದೇ ಬಾರಿಗೆ ಘೋಷಿಸಬೇಕು. ವಾರ್ಡ್ವಾರು ಎಲೆಕ್ಟ್ರಾನಿಕ್ ಮತ ಯಂತ್ರವನ್ನು (ಇವಿಎಮ್) ಎಣಿಕೆ ಮಾಡಬಾರದು. ಇದರಿಂದ ರಹಸ್ಯ ಮತದಾನದ ಆಶಯವೇ ವಿಫಲವಾದಂತಾಗುತ್ತದೆ ಮತ್ತು ರಾಜಕೀಯ ಪಕ್ಷಗಳು ಮತದಾರರಿಗೆ ಕಿರುಕುಳ ನೀಡಬಹುದು’ ಎಂದು ಪಂಜಾಬ್ನ ವಕೀಲ ಯೋಗೇಶ್ ಗುಪ್ತಾ ಅವರು ಸಲ್ಲಿಸಿರುವ ಪಿಐಎಲ್ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಕೇವಲ ನಾಲ್ಕು ದಿನಗಳು ಬಾಕಿ ಉಳಿದಿರುವಾಗ ಈ ಪಿಐಎಲ್ ಸಲ್ಲಿಸಲಾಗಿದೆ. ಮುಂದಿನ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಲಾಗಿದೆ.