ಬೆಂಗಳೂರು: ಪಕ್ಷದ ಚುನಾವಣಾ ಪ್ರಾಧಿಕಾರ ನಡೆಸಿದ ಆಯ್ಕೆ ಪ್ರಕ್ರಿಯೆ ವಿರುದ್ಧ ಪತ್ರಿಕೆಗಳಲ್ಲಿ ಜಾಹೀರಾತು ನೀಡಿರುವುದು ಪಕ್ಷದ ಶಿಸ್ತಿಗೆ ವಿರುದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್, ಮಾಜಿ ಸಚಿವ ಪ್ರೊ ಬಿ.ಕೆ.ಚಂದ್ರಶೇಖರ್ ಮತ್ತು ಡಾ.ಗುರಪ್ಪ ನಾಯ್ಡು ಅವರಿಂದ ವಿವರಣೆ ಕೇಳಿದೆ.
ಈ ಇಬ್ಬರೂ ಮುಖಂಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚುನಾವಣಾ ಪ್ರಾಧಿಕಾರ ನಡೆಸಿರುವ ಆಯ್ಕೆ ಪ್ರಕ್ರಿಯೆ ವಿರುದ್ಧ ನಿರ್ಣಯ ತೆಗೆದುಕೊಂಡಿರುವುದು ಪತ್ರಿಕೆಯೊಂದರ ಜಾಹೀರಾತಿನಲ್ಲಿ ಪ್ರಕಟಗೊಂಡಿದೆ. ಈ ಕುರಿತು ವಿವರಣೆ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ವಹಾಬ್ ಇಬ್ಬರೂ ಮುಖಂಡರಿಗೆ ಪತ್ರ ಬರೆದಿದ್ದಾರೆ.
ಪಕ್ಷದ ಸಾಂಸ್ಥಿಕ ಚುನಾವಣೆಯಲ್ಲಿ ಸರ್ವಾನುಮತದಿಂದ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನೀಡಿದ ಅಭಿಪ್ರಾಯದಂತೆ ನೇಮಕ ಪ್ರಕ್ರಿಯೆ ನಡೆದಿದೆ. ಈ ವಿಷಯದಲ್ಲಿ ಚುನಾವಣಾ ಪ್ರಾಧಿಕಾರ ತೆಗೆದುಕೊಂಡ ನಿರ್ಣಯವೇ ಅಂತಿಮ ಎಂದೂ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.