ಬೆಂಗಳೂರು: ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ತೆಕ್ಕೆಗೆ ಸೆಳೆಯಲು ಪ್ರಯತ್ನ ನಡೆದಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಸಾರಾಸಗಟಾಗಿ ಅಲ್ಲಗಳೆದಿದ್ದಾರೆ. ಈ ರೀತಿಯ ಆರೋಪ ಮಾಡುವ ಮೂಲಕ ಕುಮಾರಸ್ವಾಮಿ ಅವರು ಸಾರ್ವಜನಿಕರಿಂದ ಅನುಕಂಪ ಗಿಟ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪರಮೇಶ್ವರ್ ಲೇವಡಿ ಮಾಡಿದ್ದಾರೆ.
`ಪುಲಕೇಶಿ ನಗರ, ದೇವನಹಳ್ಳಿ, ಮೂಡಿಗೆರೆ ಮತ್ತು ನೆಲಮಂಗಲ ಕ್ಷೇತ್ರಗಳ ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದುಕೊಂಡು, ನನ್ನನ್ನು ಪ್ರತಿಪಕ್ಷದ ನಾಯಕನ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ' ಎಂದು ಕುಮಾರಸ್ವಾಮಿ ಇತ್ತೀಚೆಗೆ ಆರೋಪ ಮಾಡಿದ್ದರು. ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, `ಪ್ರತಿಪಕ್ಷದ ಶಾಸಕರನ್ನು ಸೆಳೆದು, ಕಾಂಗ್ರೆಸ್ ಟಿಕೆಟ್ ನೀಡಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡುವ ಅವಶ್ಯಕತೆ ನಮಗಿಲ್ಲ ಎಂದರು.
ಬಿಜೆಪಿಯವರು `ಆಪರೇಷನ್ ಕಮಲ' ನಡೆಸಿದಾಗ ಕಾಂಗ್ರೆಸ್ ಅದನ್ನು ವಿರೋಧಿಸಿತ್ತು. ಈಗ ಅದೇ ಮಾದರಿಯ ರಾಜಕೀಯ ತಂತ್ರಗಾರಿಕೆಯನ್ನು ಕಾಂಗ್ರೆಸ್ ನಡೆಸುವುದಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು. ಕುಮಾರಸ್ವಾಮಿ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ ನೆಲಮಂಗಲ ಶಾಸಕ ಶ್ರೀನಿವಾಸಮೂರ್ತಿ, `ಕಾಂಗ್ರೆಸ್ ನನ್ನನ್ನು ಸಂಪರ್ಕಿಸಿಲ್ಲ. ಜೆಡಿಎಸ್ ತೊರೆಯುವ ಆಲೋಚನೆಯೂ ನನಗಿಲ್ಲ' ಎಂದರು.