ಸಂತೇಮರಹಳ್ಳಿ: ಮಹಿಳೆಯರು ಆರ್ಥಿಕ ಪ್ರಗತಿ ಸಾಧಿಸಲು ಸ್ವಸಹಾಯ ಸಂಘಗಳು ಸಹಕಾರಿ ಎಂದು ಜಿಲ್ಲಾಪಂಚಾಯಿತಿ ಸದಸ್ಯ ಬಿ.ಪಿ.ಪುಟ್ಟಬುದ್ಧಿ ತಿಳಿಸಿದರು.
ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಈಚೆಗೆ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಸರ್ಕಾರದ ಸವಲತ್ತುಗಳನ್ನು ಸಂಘಗಳ ಮೂಲಕ ಸದ್ಬಳಕೆ ಮಾಡಿಕೊಂಡು ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು. ಮಹಿಳೆ ಅಬಲೆಯಲ್ಲ ಸಬಲೆ ಎಂಬುದನ್ನು ನಿರೂಪಿಸಬೇಕು ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಪ್ರಭಾರ ಅಧ್ಯಕ್ಷೆ ಪಾರ್ವತಮ್ಮ ಮಾತನಾಡಿ, ಸಂಘಗಳ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯಗಳು ದೊರೆಯುತ್ತಿವೆ. ಸಾಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಯೋಜನೆಯ ಮೇಲ್ವಿಚಾರಕ ಗಿರೀಶ್, ವಿಠಲಪೂಜಾರಿ, ಗ್ರಾಮಪಂಚಾಯಿತಿ ಸದಸ್ಯ ಬಸವಣ್ಣ, ಉಮಾದೇವಿ, ಶೈಲಜಾ, ಭಾಗ್ಯಮ್ಮ ಇದ್ದರು.