ಚಿಕ್ಕಬಳ್ಳಾಪುರ: ಆಶಾ ಕಾರ್ಯಕರ್ತೆಯರಿಗೆ ಉದ್ಯೋಗ ಭದ್ರತೆ ಒದಗಿಸುವುದು, ಸರ್ಕಾರಿ ಸೌಕರ್ಯಗಳನ್ನು ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ `ದೆಹಲಿ ಚಲೋ~ ಕಾರ್ಯಕ್ರಮದ ಅಂಗವಾಗಿ ಸಿಐಟಿಯು ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯೆಯರು ಭಾನುವಾರ ನವದೆಹಲಿಗೆ ಪ್ರಯಾಣ ಬೆಳೆಸಿದರು.
ನಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಕೆಲ ಹೊತ್ತು ಪ್ರತಿಭಟನೆ ನಡೆಸಿ, ಬೆಂಗಳೂರಿಗೆ ತೆರಳಿದರು. `ಬೇಡಿಕೆಗಳು ಈಡೇರುವವರೆಗೆ ಹೋರಾಟ ಕೈಬಿಡುವುದಿಲ್ಲ. ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು~ ಎಂದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಲಕ್ಷ್ಮಿದೇವಮ್ಮ ಮಾತನಾಡಿ, `ಜಿಲ್ಲೆಯಿಂದ ಒಟ್ಟು 300 ಆಶಾ ಕಾರ್ಯಕರ್ತೆಯರು, ರಾಜ್ಯದಿಂದ ಒಂದು ಸಾವಿರಕ್ಕೂ ಹೆಚ್ಚು ಮಂದಿ ದೆಹಲಿ ಚಲೋದಲ್ಲಿ ಭಾಗವಹಿಸಲಿದ್ದಾರೆ. ನವದೆಹಲಿಯ ಜಂತರ್ ಮಂತರ್ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುವುದು~ ಎಂದು ಹೇಳಿದರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಶೋಭಾ ಮಾತನಾಡಿ, `ಚಿಕ್ಕಬಳ್ಳಾಪುರ ತಾಲ್ಲೂಕಿನಿಂದ ಒಟ್ಟು 46 ಆಶಾ ಕಾರ್ಯಕರ್ತೆಯರು ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದಿಬ್ಬೂರು, ನಾಯನಹಳ್ಳಿ, ಮುದ್ದೇನಹಳ್ಳಿ, ನಂದಿ, ಮಂಡಿಕಲ್, ಪೆರೇಸಂದ್ರ, ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರು ಪಾಲ್ಗೊಳ್ಳಲಿದ್ದಾರೆ~ ಎಂದರು.
ಮಂಗಳವಾರ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿವಿಧ ರಾಜ್ಯಗಳಿಂದ ಆಶಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಐಟಿಯು ಮುಖಂಡ ಬಿ.ಎನ್. ಮುನಿಕೃಷ್ಣಪ್ಪ ತಿಳಿಸಿದರು.
ಸಂಘದ ಪದಾಧಿಕಾರಿಗಳಾದ ಚಂದ್ರಕಲಾ, ಗಾಯತ್ರಿ, ಆಂಜನಮ್ಮ, ಪವಿತ್ರಾ, ರಾಧಾ, ಆರತಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.