ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಪಕ್ಷೇತರರು ಅಧಿಕ ಸಂಖ್ಯೆಯಲ್ಲಿ ಕಣದಲ್ಲಿದ್ದಾರೆ. ಅವರಿಂದ ಈ ಬಾರಿ ಹೆಚ್ಚಿನ ಸ್ಪರ್ಧೆ ಎದುರಾಗಬಹುದು ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆರ್.ಅಶೋಕ ವಿಶ್ಲೇಷಿಸಿದರು.
ಪಕ್ಷದ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾತನಾಡಿ, ಉಳಿದ ಪಕ್ಷದ ಅಭ್ಯರ್ಥಿಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಈ ಬಗ್ಗೆ ಇನ್ನಷ್ಟೇ ತಿಳಿದುಕೊಳ್ಳಬೇಕಿದೆ. ಕ್ಷೇತ್ರದಾದ್ಯಂತ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀ ರಕ್ಷೆ ಎಂದು ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ. ಅಧಿಕಾರದ ಚುಕ್ಕಾಣಿ ಖಚಿತ ಎಂಬ ಭ್ರಮೆಯಲ್ಲಿದ್ದ ಕಾಂಗ್ರೆಸ್ ಬಂಡಾಯದಿಂದ ಕಂಗಾಲಾಗಿದೆ. ಎಲ್ಲ ಕಡೆಗಳಲ್ಲಿ ಬಿಜೆಪಿ ಅಲೆ ಇದೆ ಎಂದರು.
ಬಿಜೆಪಿ ಮುಖಂಡ ಅನಂತ ಕುಮಾರ್ ಮಾತನಾಡಿ, ಕಾಂಗ್ರೆಸ್ ಬಿಕ್ಕಟ್ಟು ಎದುರಿಸುತ್ತಿದೆ. ಜೆಡಿಎಸ್ ಇಕ್ಕಟ್ಟಿನಲ್ಲಿದೆ. ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಈ ಬಾರಿ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ವಿ.ಸೋಮಣ್ಣ, ಎಲ್.ಎ. ರವಿಸುಬ್ರಹ್ಮಣ್ಯ ಮತ್ತಿತರರು ಇದ್ದರು.