ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಆಸ್ತಿ ತೆರಿಗೆ ಮೌಲ್ಯಮಾಪನಕ್ಕೆ ಅನುಸರಿಸುವ ನಿಯಮಗಳನ್ನು ಹುಬ್ಬಳ್ಳಿ-ಧಾರವಾಡ, ಮೈಸೂರು, ಬೆಳಗಾವಿ ಹಾಗೂ ಮಂಗಳೂರು ಪಾಲಿಕೆಗಳಿಗೂ ಅನ್ವಯಿಸಬೇಕು ಎಂದು ಕೋರಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರಿಗೆ ಮನವಿ ಸಲ್ಲಿಸಿತು.
ಸಂಸ್ಥೆಯ ಅಧ್ಯಕ್ಷ ಎನ್.ಪಿ. ಜವಳಿ, ಉಪಾಧ್ಯಕ್ಷ ಅಂದಾನಪ್ಪ ಸಜ್ಜನರ ಮತ್ತು ಗೌರವ ಕಾರ್ಯದರ್ಶಿ ವಿಶ್ವನಾಥ ಗಿಣಿಮಾವ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಗೃಹ ಕಚೇರಿ `ಕೃಷ್ಣಾ~ದಲ್ಲಿ ಬುಧವಾರ ಭೇಟಿ ಮಾಡಿದ ನಿಯೋಗ ಈ ಮನವಿ ಸಲ್ಲಿಸಿತು.
ಆಸ್ತಿ ತೆರಿಗೆಯ ಮೌಲ್ಯ ನಿರ್ಧರಿಸುವ ಪ್ರಕ್ರಿಯೆಯಲ್ಲಿ ಕೆಲವು ನ್ಯೂನತೆಗಳಿವೆ. ಕೆಲವು ಮುಖ್ಯ ಅಂಶಗಳನ್ನು ಗಮನಿಸದೆ, ತೆರಿಗೆದಾರರ ವಾದವನ್ನು ಆಲಿಸದೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯವರು ಆಸ್ತಿ ತೆರಿಗೆ ಜಾರಿಗೆ ತಂದಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ದೂರಲಾಗಿದೆ.