ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎಲ್ಲ ಆರೋಗ್ಯ ಕೇಂದ್ರ, ಔಷಧಾಲಯ ಹಾಗೂ ಹೆರಿಗೆ ಆಸ್ಪತ್ರೆಗಳಲ್ಲಿ ಇದೇ 15ರಂದು (ಭಾನುವಾರ) ಅಪೌಷ್ಠಿಕ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಪಾಲಿಕೆಯ ವಾರ್ಡ್ವಾರು ಆಯೋಜಿಸಲಾಗಿರುವ ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಆರು ವರ್ಷದೊಳಗಿನ ಅಪೌಷ್ಠಿಕ ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳುವಂತೆ ಆಯುಕ್ತ ಎಂ.ಕೆ.ಶಂಕರಲಿಂಗೇಗೌಡ ಪ್ರಕಟಣೆಯಲ್ಲಿ ಕೋರಿದ್ದಾರೆ.
ಈ ನಡುವೆ, ನಗರದಲ್ಲಿ ಈಗಾಗಲೇ 1684 ಅಪೌಷ್ಠಿಕ ಮಕ್ಕಳನ್ನು ಗುರುತಿಸಲಾಗಿದ್ದು, ಅಂತಹ ಮಕ್ಕಳ ಹೆಚ್ಚಿನ ಚಿಕಿತ್ಸೆಗಾಗಿ ಯೋಜನೆ ರೂಪಿಸಲಾಗಿದೆ. ಇಂತಹ ಮಕ್ಕಳನ್ನು ಗುರುತಿಸುವುದಕ್ಕಾಗಿ ಪಾಲಿಕೆಯು 3454 ಸ್ವಯಂಸೇವಕರು ಹಾಗೂ ಆರೋಗ್ಯ ಸೇವಾ ಕಾರ್ಯಕರ್ತರನ್ನು ಬಳಸಿಕೊಂಡಿತ್ತು.
ಭಾನುವಾರ ಬೆಳಿಗ್ಗೆ 9.30ಕ್ಕೆ ದಾಸಪ್ಪ ಆಸ್ಪತ್ರೆ ಆವರಣದಲ್ಲಿ ನಡೆಯಲಿರುವ ಶಿಬಿರಕ್ಕೆ ಹೈಕೋರ್ಟ್ನ ನ್ಯಾಯಮೂರ್ತಿ ಎನ್.ಕೆ. ಪಾಟೀಲ್ ಹಾಗೂ ಮೇಯರ್ ಡಿ. ವೆಂಕಟೇಶಮೂರ್ತಿ ಅವರು ಚಾಲನೆ ನೀಡಲಿದ್ದು, ಉಪ ಮೇಯರ್ ಎಲ್. ಶ್ರೀನಿವಾಸ್ ಸೇರಿದಂತೆ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿರುತ್ತಾರೆ. ನುರಿತ ತಜ್ಞ ವೈದ್ಯರು ಅಪೌಷ್ಠಿಕ ಮಕ್ಕಳ ತಪಾಸಣೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.