ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಕ್ರಿಕೆಟ್: ವಾಹನ ನಿಲುಗಡೆ ನಿರ್ಬಂಧ

Last Updated 15 ಏಪ್ರಿಲ್ 2013, 19:55 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ (ಏ.16) ಐಪಿಎಲ್ ಕ್ರಿಕೆಟ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣ ಸುತ್ತಮುತ್ತಲ ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ.

ಪಂದ್ಯದ ದಿನ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 11.30 ರವರೆಗೆ ಈ ಕೆಳಕಂಡ ರಸ್ತೆಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ವೀನ್ಸ್ ರಸ್ತೆಯಲ್ಲಿ ಸಿ.ಟಿ.ಓ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಎಂ.ಜಿ.ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಲಿಂಕ್ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ವೃತ್ತದಿಂದ ಡಿಕೆನ್ಸನ್ ರಸ್ತೆ ಜಂಕ್ಷನ್‌ವರೆಗೆ ಮತ್ತು ಕ್ರೀಡಾಂಗಣದ ಕಾಂಪೌಂಡ್‌ಗೆ ಹೊಂದಿಕೊಂಡಂತಿರುವ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ.

ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸನ್ ರಸ್ತೆ ಜಂಕ್ಷನ್‌ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿಲ್ಲ. ಮದ್ರಾಸ್ ಬ್ಯಾಂಕ್ ರಸ್ತೆಯಲ್ಲಿ ಎಸ್.ಬಿ.ಐ ವೃತ್ತದಿಂದ ಆಶೀರ್ವಾದಂ ವೃತ್ತದವರೆಗೆ, ಮ್ಯೂಸಿಯಂ ರಸ್ತೆಯಲ್ಲಿ ಎಂ.ಜಿ.ರಸ್ತೆಯಿಂದ ಮದ್ರಾಸ್ ಬ್ಯಾಂಕ್ ರಸ್ತೆವರೆಗೆ ಮತ್ತು ರೆಸಿಡೆನ್ಸಿ ರಸ್ತೆವರೆಗೆ, ಕಸ್ತೂರಬಾ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ, ಗ್ರ್ಯಾಂಡ್ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ರಾಜಾರಾಮ್ ಮೋಹನ್ ರಾಯ್ ವೃತ್ತದವರೆಗೆ ವಾಹನ ನಿಲ್ಲಿಸುವಂತಿಲ್ಲ.

ಕಬ್ಬನ್ ಉದ್ಯಾನದೊಳಗೆ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಹಾಗೂ ಬಾಲಭವನಗಳ ಮುಂಭಾಗಗಳಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ. ಲ್ಯಾವೆಲ್ಲೆ ರಸ್ತೆಯಲ್ಲಿ ಗ್ರಾಂಟ್ ಜಂಕ್ಷನ್‌ವರೆಗೆ ಮತ್ತು ವಿಠಲ್ ಮಲ್ಯ ರಸ್ತೆಯಲ್ಲಿ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನಿಲುಗಡೆಗೆ ಅವಕಾಶ :
ಪಂದ್ಯ ವೀಕ್ಷಣೆಗೆ ಬರುವ ಸಾರ್ವಜನಿಕರು ಹಾಗೂ ಕೆಎಸ್‌ಸಿಎ ಸದಸ್ಯರು ಕಡ್ಡಾಯವಾಗಿ ಕಂಠೀರವ ಕ್ರೀಡಾಂಗಣದ ಒಳಗೆ ಹಾಗೂ ಸೇಂಟ್ ಜೋಸೆಫ್ ಇಂಡಿಯನ್ ಪ್ರೌಢಶಾಲೆ ಮೈದಾನದಲ್ಲಿ ವಾಹನ ನಿಲ್ಲಿಸಬೇಕು. ಅಲ್ಲದೇ ಶಿವಾಜಿನಗರ ಟಿಟಿಎಂಸಿ ಬಸ್ ನಿಲ್ದಾಣದ ಒಂದನೇ ಮಹಡಿಯಲ್ಲಿ ವಾಹನ ನಿಲ್ದಾಣ ಮಾಡಬಹುದು.

ಕ್ರೀಡಾಂಗಣದ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ವಾಹನ ನಿಲುಗಡೆಗೆ ಕೆ.ಜಿ.ಐ.ಡಿ ಕಟ್ಟಡದ ಮುಂಭಾಗದಲ್ಲಿ ಅವಕಾಶ ನೀಡಲಾಗಿದೆ.

ಸಿ.ಟಿ.ಓ ವೃತ್ತ ಹಾಗೂ ಬಿ.ಆರ್.ವಿ ಮೈದಾನದ ಬಳಿ ಮೆಟ್ರೊ ರೈಲು ಕಾಮಗಾರಿ ನಡೆಯುತ್ತಿರುವುದರಿಂದ ಸುತ್ತಮುತ್ತಲ ಪ್ರದೇಶದಲ್ಲಿ ವಾಹನ ದಟ್ಟಣೆ ಹೆಚ್ಚುವ ಸಾಧ್ಯತೆ ಇದೆ.

ಆದ್ದರಿಂದ ಕ್ರಿಕೆಟ್ ನೋಡಲು ಬರುವವರು ಸಾಧ್ಯವಾದಷ್ಟು ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸಬೇಕು. ಪಂದ್ಯ ಮುಗಿದ ಬಳಿಕ ನಗರದ ಪ್ರಮುಖ ಭಾಗಗಳಿಗೆ ಬಿಎಂಟಿಸಿ ಬಸ್ ಸೇವೆ ಇರಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಕ್ವೀನ್ಸ್ ರಸ್ತೆಯ ಗೇಟ್ ನಂ.1 ಮತ್ತು 8 ಹಾಗೂ ಲಿಂಕ್ ರಸ್ತೆಯ ಗೇಟ್ ನಂ.17 ಮತ್ತು 20ರ ಮೂಲಕ ವೀಕ್ಷಕರು ಕ್ರೀಡಾಂಗಣ ಪ್ರವೇಶಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT