ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಏಡ್ಸ್ ವಿಭಾಗ ಮತ್ತು ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ ಅ. 1ಕ್ಕೆ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ತಿಂಗಳು ಪೂರ್ತಿ ವಿವಿಧ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ.
1ರಿಂದ ತಿಂಗಳ ಅಂತ್ಯದವರೆಗೆ ಜಿಲ್ಲೆಯಲ್ಲಿ ರಕ್ತದಾನದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಥಾ, ರಕ್ತದಾನ ಶಿಬಿರ, ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಹಾಗೂ ಚರ್ಚಾಸ್ಪರ್ಧೆ ಏರ್ಪಡಿಸಲಾಗಿದೆ.
1ರಂದು ಬೆಳಿಗ್ಗೆ 9ಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ಜಾಗೃತಿ ಜಾಥಾ ಹೊರಟು ಐಎಂಎ ಹಾಲ್ನಲ್ಲಿ ಸಮಾವೇಶಗೊಳ್ಳಲಿದೆ. ಅಂದು ಪೆಸಿಟ್ ಕಾಲೇಜು, ಪ್ರಥಮದರ್ಜೆ ಕಾಲೇಜು ಮತ್ತು ಅಂಬೇಡ್ಕರ್ ಕಾಲೇಜುಗಳಲ್ಲಿ ರಕ್ತದಾನ ಶಿಬಿರಗಳು ನಡೆಯಲಿವೆ.
3ರಿಂದ 12ರವರೆಗೆ ನಗರದ ಆಯ್ದ ಕಾಲೇಜುಗಳಲ್ಲಿ ರಕ್ತದಾನ ಮಹತ್ವದ ಕುರಿತು ಮಾಹಿತಿ ಕಾರ್ಯಕ್ರಮ. 18ರಂದು ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, 19ರಂದು ಪ್ರಬಂಧ ಸ್ಪರ್ಧೆಗಳು ನಡೆಯಲಿವೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಜೇತರಾದವರನ್ನು ಹಾಗೂ ರಕ್ತದಾನಿಗಳನ್ನು 20ರಂದುನಡೆಯುವ ಸಮಾರಂಭದಲ್ಲಿ ಗೌರವಿಸಲಾಗುವುದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ದಿನಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.