ಬೆಂಗಳೂರು: `ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಆಗಿರುವುದು ಮತ್ತಷ್ಟು ಸಾಧನೆ ಮಾಡಲು ಸ್ಫೂರ್ತಿ ನೀಡಿದೆ~ ಎಂದು ಭಾರತ ಕ್ರಿಕೆಟ್ ತಂಡದ ನಾಯಕಿ ಜೂಲನ್ ಗೋಸ್ವಾಮಿ ಹೇಳಿದ್ದಾರೆ.
`ನಾನು ಈ ಪ್ರಶಸ್ತಿಯನ್ನು ನಿರೀಕ್ಷಿಸಿರಲಿಲ್ಲ. ಆದರೆ ಬುಧವಾರ ಮಧ್ಯಾಹ್ನ ಈ ವಿಷಯ ಗೊತ್ತಾಗುತ್ತಿದ್ದಂತೆ ತುಂಬಾ ಖುಷಿಯಾಯಿತು. ಇದೊಂದು ನನ್ನ ಶ್ರಮಕ್ಕೆ ಸಿಕ್ಕ ಪ್ರತಿಫಲ~ ಎಂದು ಜೂಲನ್ `ಪ್ರಜಾವಾಣಿ~ಗೆ ಪ್ರತಿಕ್ರಿಯಿಸಿದ್ದಾರೆ.
ಮುಂದಿನ ತಿಂಗಳು ಟ್ವೆಂಟಿ-20 ಹಾಗೂ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ವೆಸ್ಟ್ಇಂಡೀಸ್ಗೆ ತೆರಳಲಿರುವ ಜೂಲನ್ ಸಹ ಆಟಗಾರ್ತಿಯರೊಂದಿಗೆ ಉದ್ಯಾನ ನಗರಿಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ)ಯಲ್ಲಿ ಅಭ್ಯಾಸದಲ್ಲಿ ತೊಡಗಿದ್ದಾರೆ.
`ಈ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ. ಮುಂಬರುವ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಇದು ಸ್ಫೂರ್ತಿಯಾಗಲಿದೆ~ ಎಂದು ಹೇಳಿದ್ದಾರೆ.