ಬೆಂಗಳೂರು: `ಉತ್ತರ ಕರ್ನಾಟಕ ಭಾಗದಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಔಷಧ ವಿಜ್ಞಾನ ಕಾಲೇಜುಗಳನ್ನು ಸ್ಥಾಪನೆ ಮಾಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಲಿದೆ' ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಸರ್ಕಾರಿ ಔಷಧ ವಿಜ್ಞಾನ ಕಾಲೇಜು ನಗರದ ನಿಮ್ಹಾನ್ಸ್ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
`ಔಷಧ ವಿಜ್ಞಾನವೂ ಆಸ್ಪತ್ರೆಗಳ ಕಾರ್ಯನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಔಷಧ ವಿಜ್ಞಾನಕ್ಕೆ ಸಂಬಂಧಪಟ್ಟ ಕಾಲೇಜುಗಳ ಸ್ಥಾಪನೆ ಮಾಡುವ ಅಗತ್ಯವಿದೆ' ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್, `ಔಷಧ ವಿಜ್ಞಾನ ಕ್ಷೇತ್ರದಲ್ಲಿನ ಬೆಳವಣಿಗೆಯೂ ಆರೋಗ್ಯ ಇಲಾಖೆಯ ಅಭಿವೃದ್ಧಿಗೆ ಪೂರಕವಾಗಿರುತ್ತದೆ. ಹಾಗಾಗಿ ಔಷಧ ವಿಜ್ಞಾನದ ಕೋರ್ಸ್ಗಳಿಗೆ ಪ್ರತಿಭಾವಂತ ವಿದ್ಯಾರ್ಥಿಗಳು ಸೇರ್ಪಡೆಗೊಳ್ಳಬೇಕು' ಎಂದು ತಿಳಿಸಿದರು.
ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಮದನ್ ಗೋಪಾಲ್ ಅವರು ಮಾತನಾಡಿ, `ಹಲವು ಸವಾಲುಗಳ ನಡುವೆಯೂ ಒಂದು ಸರ್ಕಾರಿ ಶಿಕ್ಷಣ ಸಂಸ್ಥೆಯು ಐವತ್ತು ವರ್ಷಗಳ ಕಾಲ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸುತ್ತಿರುವುದು ಸಂತೋಷದ ವಿಚಾರ' ಎಂದು ಹೇಳಿದರು.