ಚಾಮರಾಜನಗರ: ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನೀತಿ ಖಂಡಿಸಿ ನಗರದಲ್ಲಿ ಶುಕ್ರವಾರ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಮೆರವಣಿಗೆ ಆರಂಭಿಸಿದರು. ಬಳಿಕ ಭುವನೇಶ್ವರಿ ವೃತ್ತಕ್ಕೆ ಆಗಮಿಸಿ ಸಾರ್ವಜನಿಕರಿಗೆ ಉಚಿತವಾಗಿ ನಂದಿನಿ ಹಾಲು ವಿತರಿಸುವ ಮೂಲಕ ದರ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಹಾಲಿನ ದರ ಏರಿಕೆಯಿಂದ ಗ್ರಾಹಕರಿಗೆ ಬರೆ ಎಳೆಯಲಾಗಿದೆ. ಮತ್ತೊಂದೆಡೆ ಕೇಂದ್ರದ ಯುಪಿಎ ಸರ್ಕಾರ ಅಗತ್ಯವಸ್ತುಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಸಾರ್ವ ಜನಿಕರು ತೊಂದರೆ ಅನುಭವಿಸು ವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿವೆ. ಸಾರ್ವಜನಿಕರ ಅಭಿವೃದ್ಧಿಗೆ ಆದ್ಯತೆ ನೀಡುತ್ತಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೂ ಕಬಳಿಕೆ ಹಗರಣದಲ್ಲಿ ಸಿಲುಕಿದ್ದರೂ ರಾಜೀನಾಮೆ ನೀಡುತ್ತಿಲ್ಲ. ಕೇಂದ್ರದಲ್ಲೂ 2ಜಿ ಸ್ಪೆಕ್ಟ್ರಂ ಹಗರಣ ನಡೆದಿದ್ದು, ಸಾರ್ವಜನಿಕರ ತೆರಿಗೆ ಹಣದ ಲೂಟಿ ನಡೆಯುತ್ತಿದೆ ಎಂದು ಆರೋಪಿಸಿದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆಲೂರು ಮಲ್ಲು, ಮುಖಂಡ ರಾದ ಕೋಡಿಮೋಳೆ ಗೋವಿಂದಶೆಟ್ಟಿ, ಕೆಲ್ಲಂಬಳ್ಳಿ ಸೋಮನಾಯಕ, ದೊಡ್ಡ ರಾಯಪೇಟೆ ರಂಗಯ್ಯ, ಪುಣ್ಯದ ಹುಂಡಿ ರಾಜು, ಶ್ರೀನಿವಾಸ ಪ್ರಸಾದ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.