ಗುಲ್ಬರ್ಗ (ಪಿಟಿಐ): ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಯೋಜನೆಗಳಿಗೆ 5400 ಕೋಟಿ ರೂಗಳನ್ನು ವಿನಿಯೋಗಿಸಲು ಗುಲ್ಬರ್ಗದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಒಟ್ಟು 7875 ಕೋಟಿ ರೂಗಳನ್ನು ವಿನಿಯೋಗಿಸಲು ಸಭೆ ನಿರ್ಧರಿಸಿತು. ಇದರಲ್ಲಿ ಸಿಂಹಪಾಲು ಉತ್ತರ ಕರ್ನಾಟಕ ಭಾಗಕ್ಕೆ ದೊರೆತಿದೆ.
4085 ಕೋಟಿ ರೂಗಳನ್ನು ಕೃಷ್ಣಾ ಮೇಲ್ದಂಡೆ ಯೋಜನೆಯ ನಾರಾಯಣಪುರ ಎಡದಂಡೆ ಕಾಲುವೆಯ ನವೀಕರಣಕ್ಕೆ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಜಗದೀಶ್ಶೆಟ್ಟರ್ ಅವರು ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
ಉತ್ತರ ಕರ್ನಾಟಕದ 13 ನಗರಗಳಿಗೆ ಕುಡಿಯುವ ನೀರಿಗಾಗಿ 197.71ಕೋಟಿ ರೂ ಹಾಗೂ ಗುಲ್ಬರ್ಗ ಭಾಗದ 8 ಕೈಗಾರಿಕಾ ವಲಯಗಳ ಅಭಿವೃದ್ಧಿಗೆ 408 ಕೋಟಿ ರೂಗಳನ್ನು ವಿನಿಯೋಗಿಸಲು ತೀರ್ಮಾನಿಸಲಾಯಿತು ಎಂದು ಅವರು ತಿಳಿಸಿದರು.
ಗುಲ್ಬರ್ಗದಲ್ಲಿ ಖಾಸಗಿ ವಿಶ್ವವಿದ್ಯಾನಿಲಯ ಸ್ಥಾಪಿಸಲು ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘಕ್ಕೆ ಅನುಮತಿ, ರಾಜ್ಯಾದ್ಯಂತ 7 ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒಪ್ಪಿಗೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ವಿವಿಧ ಹೋರಾಟಗಳಲ್ಲಿ ರೈತರ ಮೇಲೆ ದಾಖಲಾಗಿದ್ದ 20 ಪ್ರಕರಣಗಳನ್ನು ಹಿಂತೆಗೆಯಲೂ ಸಚಿವ ಸಂಪುಟ ಸಭೆ ನಿರ್ಣಯ ತೆಗೆದುಕೊಂಡಿದೆ.