ಬೀದರ್: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಕೊಡುವಂತೆ ಒತ್ತಾಯಿಸಿ ಕೂಲಿ ಕಾರ್ಮಿಕರು ನಗರದಲ್ಲಿ ಗುರುವಾರ ಪ್ರತಿಭಟನಾ ರ್ಯಾಲಿ ನಡೆಸಿದರು.
ನಗರದ ಬೊಮ್ಮಗೊಂಡೇಶ್ವರ ವೃತ್ತದಿಂದ ತಾಲ್ಲೂಕು ಪಂಚಾಯಿತಿ ಕಚೇರಿವರೆಗೆ ರ್ಯಾಲಿ ನಡೆಸಿ ಮನವಿ ಸಲ್ಲಿಸಲಾಯಿತು.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಘೋಷಣೆಗಳನ್ನು ಹಾಕಲಾಯಿತು. ನಂತರ ಮೆರವಣಿಗೆ ಮೂಲಕ ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿ ಕಚೇರಿಗಳಿಗೆ ತೆರಳಿ ಮನವಿ ಸಲ್ಲಿಸಲಾಯಿತು.
ಅಖಿಲ ಭಾರತ ಕಿಸಾನ ಸಭಾ, ಭಾರತೀಯ ಖೇತ್ ಮಜ್ದೂರ್ ಯೂನಿಯನ್, ಅಖಿಲ ಭಾರತ ಯುವಜನ ಒಕ್ಕೂಟಗಳ ಮುಂದಾಳತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಮುಖರಾದ ಸಾಯಿಬಣ್ಣಾ ಹಸರಗುಂಡಗಿ, ಬಾಬುರಾವ ಹೊನ್ನಾ, ಪ್ರಕಾಶ ಕುಶನೂರೆ, ಜಗನ್ನಾಥ ಮಹಾರಾಜ, ಮಲ್ಲಿಕಾರ್ಜುನ ಹತ್ತಿ, ಶಂಕರರಾವ ಕಮಠಾಣ, ರಶೀದ್ ಖಾನ್ ಮತ್ತಿತರರು ಪಾಲ್ಗೊಂಡಿದ್ದರು.