ಬೆಂಗಳೂರು: ಉದ್ಯೋಗ ಖಾತರಿ ಜತೆ 9 ಇಲಾಖೆಗಳ ಯೋಜನೆಗಳನ್ನು ಒಗ್ಗೂಡಿಸಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.
ಅರಣ್ಯ, ತೋಟಗಾರಿಕೆ, ಸಣ್ಣ ನೀರಾವರಿ, ಕೃಷಿ, ಜಲಾನಯನ ಅಭಿವೃದ್ಧಿ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ, ಪಂಚಾಯತ್ರಾಜ್ ಎಂಜಿನಿಯರಿಂಗ್ ಇಲಾಖೆಗಳು ತಮ್ಮ ಕಾಮಗಾರಿಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಒಗ್ಗೂಡಿಸುವಿಕೆ ಮೂಲಕ ಅನುಷ್ಠಾನಗೊಳಿಸಬಹುದಾಗಿದೆ.
ಶನಿವಾರ ವಿಕಾಸ ಸೌಧದಲ್ಲಿ ನಡೆದ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೊಗ ಖಾತರಿ ಯೋಜನೆಯೊಂದಿಗೆ ಇತರೆ ಕಾರ್ಯಕ್ರಮಗಳನ್ನು ಒಗ್ಗೂಡಿಸುವಿಕೆಯ ಕುರಿತ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ವಿವರ ನೀಡಿದರು.
ಅಂಗನವಾಡಿ ಕಟ್ಟಡಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜತೆ ಸೇರಿ ನಿರ್ಮಿಸಲಾಗುವುದು. ಪ್ರತಿ ಅಂಗನವಾಡಿ ಕಟ್ಟಡಕ್ಕೆ ಇಲಾಖೆಯ ಘಟಕ ವೆಚ್ಚದ ಅಡಿ ₨11.95 ಲಕ್ಷಗಳನ್ನು ನೀಡಬೇಕು. ಉಳಿದ ₨ 4 ಲಕ್ಷಗಳನ್ನು ಉದ್ಯೋಗ ಖಾತರಿ ಯೋಜನೆ ಅಡಿ ಭರಿಸಲಾಗುವುದು. ಇದೇ ರೀತಿ ಪ್ರತಿ ಗ್ರಾಮ ಪಂಚಾಯ್ತಿಗೆ ಎರಡು ಕೆರೆಯಂತೆ ರಾಜ್ಯದಲ್ಲಿ 12 ಸಾವಿರ ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಪ್ರತಿ ಗ್ರಾಮ ಪಂಚಾಯ್ತಿಗೆ ಎರಡು ಆಟದ ಮೈದಾನದಂತೆ ರಾಜ್ಯದಲ್ಲಿ 12 ಸಾವಿರ ಆಟದ ಮೈದಾನಗಳನ್ನು ನಿರ್ಮಿಸಲು ಸಹ ಉದ್ದೇಶಿಸಲಾಗಿದೆ. ಕೃಷಿ ಇಲಾಖೆ ಜತೆ ಕೈಜೋಡಿಸಿ 1 ಲಕ್ಷ ಹೊಂಡಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.
ಕಾರ್ಯಾಗಾರ ಉದ್ಘಾಟಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಎಚ್.ಕೆ. ಪಾಟೀಲ್, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯೊಂದಿಗೆ ಇತರ ಇಲಾಖೆಯ ಯೋಜನೆಗಳನ್ನು ಒಗ್ಗೂಡಿಸುವಿಕೆ ಮೂಲಕ ಬರಮುಕ್ತ ಗ್ರಾಮಗಳನ್ನಾಗಿ ಪರಿವರ್ತಿಸಲು ಅಧಿಕಾರಿಗಳು ಪಣತೊಡಬೇಕು ಎಂದು ಸಲಹೆ ನೀಡಿದರು.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತ ಜಿ.ವಿ. ಕೃಷ್ಣರಾವ್ ಮಾತನಾಡಿ, ಹಣಕಾಸು ವರ್ಷದ ಮೂರನೇ ತ್ರೈಮಾಸಿಕ ಮುಗಿಯುತ್ತ ಬಂದಿದ್ದರೂ ಯಾವುದೇ ಇಲಾಖೆಯಲ್ಲಿ ಶೇಕಡಾ 75ರಷ್ಟು ಅನುದಾನ ಖರ್ಚು ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ನಿರ್ದೇಶಕ ಮುನೀಶ್ ಮೌದ್ಗಿಲ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.