ದಾವಣಗೆರೆ: ನಿರಂತರವಾಗಿ ತರಗತಿ ನಡೆಸಲು ಅನುವಾಗುವಂತೆ ಅತಿಥಿ ಉಪನ್ಯಾಸಕರಿಗೆ ಸೂಕ್ತ ವೇತನ ನೀಡಬೇಕು ಎಂದು ಒತ್ತಾಯಿಸಿ ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರಸ್ತೆತಡೆ ಮೂಲಕ ಮಂಗಳವಾರ ಪ್ರತಿಭಟನೆ ನಡೆಸಿದರು.
ಕಾಲೇಜಿನ ಅತಿಥಿ ಉಪನ್ಯಾಸಕರು ಯುಜಿಸಿ ನಿಯಮಾವಳಿ ಪ್ರಕಾರ ವೇತನ ಪಾವತಿ, ಉದ್ಯೋಗ ಭದ್ರತೆ, ವರ್ಷದ ಎಲ್ಲ ತಿಂಗಳುಗಳಲ್ಲಿಯೂ ವೇತನ ಪಾವತಿ ಇತ್ಯಾದಿ ಬೇಡಿಕೆಗಳನ್ನಿಟ್ಟುಕೊಂಡು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ತರಗತಿಗೆ ತೊಂದರೆಯಾಗಿದೆ. ಪರೀಕ್ಷಾ ದೃಷ್ಟಿಯಿಂದಲೂ ಇದು ಮಾರಕ ಪರಿಣಾಮ ಬೀರಲಿದೆ. ಆದ್ದರಿಂದ ಸರ್ಕಾರ ಕೂಡಲೇ ಈ ಬೇಡಿಕೆಗಳನ್ನು ಪರಿಶೀಲಿಸಿ ಅವುಗಳನ್ನು ಈಡೇರಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಿಂದ ಮೆರಣಿಗೆಯಲ್ಲಿ ಆಗಮಿಸಿದ ವಿದ್ಯಾರ್ಥಿಗಳು ಪಿಬಿ ರಸ್ತೆಯಲ್ಲಿ ಸಾಗಿ ಗಾಂಧಿವೃತ್ತದಲ್ಲಿ ರಸ್ತೆತಡೆ ನಡೆಸಿ ಘೋಷಣೆಗಳನ್ನು ಕೂಗಿದರು. ಅಲ್ಲಿಂದ ಮುಂದೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಅರ್ಪಿಸಿದರು.
ವಿದ್ಯಾರ್ಥಿಗಳ ಮುಷ್ಕರದಿಂದ ಸಂಚಾರ ವ್ಯವಸ್ಥೆ ಕೆಲಕಾಲ ತೊಂದರೆಗೀಡಾಯಿತು.
ವಿದ್ಯಾರ್ಥಿ ಮುಖಂಡರಾದ ಡಿ. ತಿಪ್ಪೇಸ್ವಾಮಿ, ಆರ್.ಬಿ. ಶಿವರಾಜ್, ನಿತಿನ್ ಕುಮಾರ್, ಮಂಜಪ್ಪ, ಹರೀಶ್, ಅಂಕಿತಾ, ರೇಣುಕಾ, ರೂಪಾ ಇತರರು ನೇತೃತ್ವ ವಹಿಸಿದ್ದರು.