ಚೆನ್ನೈ (ಪಿಟಿಐ): ಉಪರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವ ಕುರಿತು ಉಂಟಾಗಿದ್ದ ಊಹಾಪೋಹಗಳಿಗೆ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ತೆರೆ ಎಳೆದಿದ್ದಾರೆ. `ತಾವು ಉಪರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ~ ಎಂದು ಭಾನುವಾರ ಇಲ್ಲಿ ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಹೆಸರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ಪರಿಗಣಿಸುವಂತೆ ಯುಪಿಎ ಮಿತ್ರ ಪಕ್ಷಗಳಿಗೆ ಸಲಹೆ ನೀಡಿದ್ದು, ಇದಕ್ಕೆ ಅವರಿಗೆ ಧನ್ಯವಾದಗಳು ಎಂದು ಗಾಂಧಿ ಹೇಳಿದ್ದಾರೆ.
ಉಪರಾಷ್ಟ್ರಪತಿ ಸ್ಥಾನಕ್ಕೆ ಯಾವುದೇ ನಾಯಕರು ತಮ್ಮ ಹೆಸರನ್ನು ಎಳೆದು ತರಬಾರದು ಎಂದು ಮನವಿ ಮಾಡಿದ್ದಾರೆ. ಯುಪಿಎ ಅಭ್ಯರ್ಥಿಯಾಗಿರುವ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರನ್ನು ಬೆಂಬಲಿಸುವಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಶನಿವಾರ ಮಮತಾ ಬ್ಯಾನರ್ಜಿ ಅವರನ್ನು ಕೋರಿದ್ದರು.