ಚಾಮರಾಜನಗರ: `ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿರುವ ಉಪ್ಪಾರ ಸಮುದಾಯಕ್ಕೂ ಪರಿಶಿಷ್ಟ ಜಾತಿಗೆ ನೀಡಿರುವ ಮೀಸಲಾತಿ ಸೌಲಭ್ಯ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕಿದೆ~ ಎಂದು ಹೊಸದುರ್ಗ ತಾಲ್ಲೂಕಿನ ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಒತ್ತಾಯಿಸಿದರು.
ನಗರದಲ್ಲಿ ಶುಕ್ರವಾರ ಜಿಲ್ಲಾ ಉಪ್ಪಾರ ಸಂಘದಿಂದ ಹಮ್ಮಿಕೊಂಡಿದ್ದ ಮಹರ್ಷಿ ಭಗೀರಥ ಜಯಂತಿ ಹಾಗೂ ಬೃಹತ್ ಉಪ್ಪಾರ ಸಮಾವೇಶದಲ್ಲಿ ಮಾತನಾಡಿದರು.ಪ್ರಸ್ತುತ ಹಿಂದುಳಿದ ಪ್ರವರ್ಗ-1ರಲ್ಲಿ ಉಪ್ಪಾರ ಜನಾಂಗವಿದೆ. ಆದರೆ, ಸಮರ್ಪಕವಾಗಿ ಸರ್ಕಾರದ ಸವಲತ್ತು ಲಭಿಸುತ್ತಿಲ್ಲ.
ಉಪ್ಪಾರರಿಗೆ ಪರಿಶಿಷ್ಟ ಜಾತಿಯ ಮೀಸಲಾತಿ ಸೌಲಭ್ಯ ಕಲ್ಪಿಸುವಂತೆ ಹಲವು ವರ್ಷದಿಂದಲೂ ಒತ್ತಾಯಿಸಲಾಗುತ್ತಿದೆ. ಆದರೆ, ಆಳುವ ಸರ್ಕಾರಗಳು ಸಮುದಾಯದ ಕೂಗಿಗೆ ಕಿವಿಗೊಟ್ಟಿಲ್ಲ. ಹೀಗಾಗಿ, ಜನಾಂಗ ಹಿಂದುಳಿದಿದೆ. ಈ ಹಿನ್ನೆಲೆಯಲ್ಲಿ ಉಪ್ಪಾರರನ್ನು ಪರಿಶಿಷ್ಟ ಜಾತಿಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂಬುದು ಸಮುದಾಯದ ಹಕ್ಕೊತ್ತಾಯವಾಗಿದೆ ಎಂದರು.
ವಾಲ್ಮೀಕಿ, ಬಸವಣ್ಣ, ಕನಕದಾಸರು ಸೇರಿದಂತೆ ಹಲವು ದಾರ್ಶನಿಕರ ಜಯಂತಿಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದೆ. ಅದೇ ಮಾದರಿಯಲ್ಲಿ ಉಪ್ಪಾರ ಜನಾಂಗದ ಕುಲಗುರುವಾದ ಮಹರ್ಷಿ ಭಗೀರಥ ಜಯಂತಿಯನ್ನು ಆಚರಿಸಬೇಕು. ಸರ್ಕಾರಿ ರಜೆ ಘೋಷಿಸಿ ಜಯಂತಿ ಆಚರಿಸುವಂತೆ ನಾವು ಒತ್ತಾಯಿಸುವುದಿಲ್ಲ, ರಜೆ ರಹಿತವಾಗಿ ಭಗೀರಥರ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
`ರಾಜ್ಯದಲ್ಲಿ ಉಪ್ಪಾರ ಸಮಾಜದವರು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಹೀಗಾಗಿ, ಸಮುದಾಯದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಎಲ್ಲ ಪಕ್ಷಗಳಲ್ಲೂ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು~ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ.ರೇಣುಕಾಚಾರ್ಯ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಜರಿದ್ದರು.