ಬೆಳಗಾವಿ: ಕ್ಯಾರಿ ಓವರ್ ಪದ್ಧತಿ ಸಡಿಲಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳ ಒಕ್ಕೂಟದ ನೇತೃತ್ವದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಈ ಸಾಲಿನಿಂದ 2010ರ ಹೊಸ ಪಠ್ಯಕ್ರಮ ಜಾರಿಯಾಗಿದೆ. ಆದರೆ ಈ ಪಠ್ಯಕ್ರಮದಿಂದ 2006ನೇ ಬ್ಯಾಚ್ನ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಈ ಸಮಸ್ಯೆಯನ್ನು ನಿವಾರಿಸಬೇಕು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನಿಬಂಧನೆಗಳ ಪ್ರಕಾರ 2ನೇ ವರ್ಷ ಅಂದರೆ, ಮೂರು ಹಾಗೂ ನಾಲ್ಕನೇ ಸೆಮಿಸ್ಟರ್ನಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣರಾದವರು ನಾಲ್ಕನೇ ವರ್ಷಕ್ಕೆ ಅರ್ಹರಾಗುವುದಿಲ್ಲ.
ಈ ಕ್ರಮದಿಂದ ರಾಜ್ಯದಲ್ಲಿ 12000 ಎಂಜಿನಿಯರಿಂಗ್ ವಿದ್ಯಾರ್ಥಿಗಳ ಭವಿಷ್ಯ ಅತಂತ್ರದಲ್ಲಿ ಸಿಕ್ಕಂತಾಗಿದೆ. ಆದ್ದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ಪದ್ಧತಿಯನ್ನು ಕೂಡಲೇ ತೆಗೆಯಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಮನವಿ ಸ್ವೀಕರಿಸಿ ವಿಟಿಯು ಕುಲಸಚಿವ ಡಾ. ಎಸ್.ಎ.ಕೋರಿ, ಈ ಬೇಡಿಕೆಯನ್ನು ಕುಲಪತಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಒಂದು ವಾರದೊಳಗೆ ಸಮಸ್ಯೆ ಬಗೆಹರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ರಮೇಶಗೌಡ ಎಚ್ಚರಿಕೆ ನೀಡಿದರು. ಸಂಘಟನಾ ಕಾರ್ಯದರ್ಶಿ ಮಂಜುನಾಥ ಡಿ.ಎನ್. , ಉಪಾಧ್ಯಕ್ಷ ಗೋವಿಂದರಾಜ್ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 400 ವಿದ್ಯಾರ್ಥಿಗಳು ಭಾಗವಹಿಸಿದ್ದರು.