ತುಮಕೂರು: ಮೀಸಲು ಅರಣ್ಯ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಮಾಡಿದ ಆರೋಪದ ಮೇಲೆ ಇಬ್ಬರು ತುಂಡು ಗುತ್ತಿಗೆದಾರರು ಹಾಗೂ ಜಿಲ್ಲಾ ಪಂಚಾಯತಿ ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ವಿರುದ್ಧ ಅರಣ್ಯ ಇಲಾಖೆ ದೋಷರೋಪ ಪಟ್ಟಿ ಸಲ್ಲಿಸಲಿದೆ.
ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದ ಚಿನಗ ರಂಗನಾಥಸ್ವಾಮಿ ದೇವಸ್ಥಾನಕ್ಕೆ ರಸ್ತೆ ನಿರ್ಮಿಸಲು 2008ರಲ್ಲಿ ತುಂಡು ಗುತ್ತಿಗೆದಾರರಾದ ನಾಗರಾಜು, ಪ್ರಕಾಶ್ ಎಂಬುವರು ಸರ್ಕಾರದಿಂದ ₨ 2 ಲಕ್ಷ ಅನುದಾನ ಪಡೆದಿದ್ದರು.
ಅಂದಿನ ಜಿ.ಪಂ. ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಂಜುಂಡಯ್ಯ ನೇತೃತ್ವದಲ್ಲಿ ರಸ್ತೆ ನಿರ್ಮಿಸಲಾಗಿತ್ತು. ಆದರೆ, ಅರಣ್ಯ ಪ್ರದೇಶದಲ್ಲಿ ರಸ್ತೆ ನಿರ್ಮಿಸುತ್ತಿರುವುದನ್ನು ಪ್ರಶ್ನಿಸಿ ಪರಿಸರವಾದಿಗಳು ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ ಆರೋಪಿಗಳ ವಿರುದ್ಧ ತನಿಖೆ ನಡೆಸಿ, ಒಂದು ತಿಂಗಳೊಳಗೆ ದೋಷಾರೋಪ ಪಟ್ಟಿ ಸಲ್ಲಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿತ್ತು.
ಅರಣ್ಯಾಧಿಕಾರಿಗಳು ತನಿಖೆ ನಡೆಸಿ, ಆರೋಪಿಗಳ ವಿರುದ್ಧ ದೋಷಾರೋಪ ಸಿದ್ಧಪಡಿಸಿದ್ದಾರೆ. ಮುಂದಿನ 2–3 ದಿನಗಳಲ್ಲಿ ಲೋಕಾಯುಕ್ತಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
ಈ ಮಧ್ಯೆ ಬಂಧನದ ಭೀತಿಗೆ ಒಳಗಾದ ಆರೋಪಿಗಳು ಬುಧವಾರ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.
1980ರ ಭಾರತೀಯ ಅರಣ್ಯ ಸಂರಕ್ಷಣೆ ಕಾಯ್ದೆಯಡಿ ಅನುಮತಿ ಪಡೆಯದೇ ರಸ್ತೆ ಕಾಮಗಾರಿ ನಡೆಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಗುತ್ತಿಗೆದಾರರು, ಜಿ.ಪಂ. ಎಂಜಿನಿಯರ್ಗೆ ಬಂಧನದ ಭೀತಿ ಎದುರಾಗಿತ್ತು.