ನಾಪೋಕ್ಲು: ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಬೇತು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಂದು ವಾರ ಕಾಲ ಆಯೋಜಿಸಲಾಗಿದ್ದ ವಿಶೇಷ ಶಿಬಿರದಲ್ಲಿ ಶಿಬಿರಾರ್ಥಿಗಳು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಪ್ರತಿದಿನ ಮಧ್ಯಾಹ್ನ ಸಂಪನ್ಮೂಲ ವ್ಯಕ್ತಿಗಳಿಂದ ಪ್ರಚಲಿತ ವಿದ್ಯಮಾನಗಳ ಕುರಿತು ಉಪನ್ಯಾಸ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಹಾಡುಗಾರಿಕೆ, ನೃತ್ಯ, ಮಿಮಿಕ್ರಿ, ಅಂತ್ಯಾಕ್ಷರಿ ಸೇರಿದಂತೆ ವಿವಿಧ ಮನೋರಂಜನಾ ಕಾರ್ಯಕ್ರಮಗಳಲ್ಲಿ ಶಿಬಿರಾರ್ಥಿಗಳು ತೊಡಗಿಸಿಕೊಂಡಿದ್ದರು.
ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಷಣ್ಮುಗಂ ಗಿಟಾರ್ ನುಡಿಸಿ ಶಿಬಿರಾರ್ಥಿಗಳ ಮನಗೆಲ್ಲುವಲ್ಲಿ ಯಶಸ್ವಿ ಯಾದರು. ಶಿಬಿರಾರ್ಥಿಗಳು ಪ್ರತಿದಿನ ವೈವಿಧ್ಯಮಯ ನೃತ್ಯದ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿದರು.
ಶಿಬಿರಾರ್ಥಿ ಸುನಿಲ್ ಮಾತನಾಡಿ ಶ್ರಮದಾನ ಹಾಗೂ ಶಾಲೆಯ ಸ್ವಚ್ಚತೆ ಅಲ್ಲದೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ವಿದ್ಯಾರ್ಥಿಗಳು ತೊಡಗಿಸಿಕೊಂಡಿದ್ದರು ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯೋದ್ದೇಶಗಳಿಗೆ ಅನುಗುಣವಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶಿಬಿರ ಆಯೋಜಿಸಲು ಗ್ರಾಮಸ್ಥರ ಹಾಗೂ ಶಾಲೆಯ ಶಿಕ್ಷಕರ ಸಹಕಾರ ದೊರೆಯಿತು ಎಂದು ಎನ್ಎಸ್ಎಸ್ ಶಿಬಿರಾಧಿಕಾರಿ ಕಿಶೋರ್ ಕುಮಾರ್ ಹೇಳಿದರು.