ಹಿರಿಯೂರು: ಪ್ರತಿಯೊಬ್ಬರೂ ಸಾಮಾನ್ಯ ಕಾನೂನು ತಿಳಿವಳಿಕೆ ಯೊಂದಿಗೆ ಮಾನವ ಹಕ್ಕುಗಳ ಬಗ್ಗೆ
ಜಾಗೃತಿ ಹೊಂದುವುದು ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಬಿ.ಚಂದ್ರಶೇಖರ್ ತಿಳಿಸಿದರು.
ನಗರದಲ್ಲಿ ಮಂಗಳವಾರ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ
ವತಿಯಿಂದ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯ ಜ್ಞಾಪಕಾರ್ಥವಾಗಿ ಪ್ರತಿವರ್ಷ ಡಿ.10ರಂದು ವಿಶ್ವದಾದ್ಯಂತ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಆಚರಿಸಲಾಗುತ್ತಿದೆ. ಮಾನವ ಹಕ್ಕುಗಳಿಗೆ ವಿಶ್ವದಾದ್ಯಂತ ಮನ್ನಣೆಯಿದೆ. ಮಾನವ ಹಕ್ಕುಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿವಳಿಕೆ ನೀಡುವ ಜವಾಬ್ದಾರಿ ನ್ಯಾಯಾಧೀಶರು ಮತ್ತು ವಕೀಲರ ಮೇಲಿದೆ ಎಂದು ಚಂದ್ರಶೇಖರ್ ತಿಳಿಸಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ದೇವರಾಜು ಮಾತನಾಡಿ, ಹುಟ್ಟಿರುವ ಪ್ರತಿ ವ್ಯಕ್ತಿಗೂ ಜೀವಿಸುವ ಹಕ್ಕಿದೆ. ಮಾನವ ಹಕ್ಕುಗಳ ಸಮರ್ಪಕ ಅನುಷ್ಠಾನದ ಅಗತ್ಯವಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಕೆ.ಮಹಾಂತೇಶ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಎಂ.ಆರ್.ಪ್ರಭಾಕರ್, ಡಿ.ಗೌಡ, ಎಸ್.ಜಯಣ್ಣ, ಎಚ್.ಎಸ್. ಕೀರ್ತಿಕುಮಾರಿ, ಕೆ.ವಿ.ದಯಾನಂದ್, ನೂರ್ ಅಹಮದ್, ಬಿ.ತಿರುಮಲೇಶ್, ಪಿ.ಕೆ.ಹೊನ್ನೂರ್ ಸಾಬ್, ಮಹಾಲಿಂಗಪ್ಪ, ಆರೀಫುಲ್ಲಾಖಾನ್ ಇದ್ದರು.