ಬೆಂಗಳೂರು: `ಗ್ರಾಮೀಣ ಪ್ರದೇಶಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ~ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಸಿದ್ದಲಿಂಗಯ್ಯ ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ ಮತ್ತು ಎಸ್ಟಿ ನೌಕರರ ಸಮನ್ವಯ ಸಮಿತಿಯು ಗುರುವಾರ ಕೆ.ಜಿ.ಎಸ್.ಕ್ಲಬ್ನ ಬಿ.ಚನ್ನಬಸಪ್ಪ ಸಭಾಂಗಣದಲ್ಲಿ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
`ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಜನರು ಅವಿದ್ಯಾವಂತರಾಗಿದ್ದಾರೆ. ಇದರಿಂದ ಅವರಿನ್ನೂ ಅಜ್ಞಾನ ಭಾವದಲ್ಲಿಯೇ ಬಾಳುತ್ತಿದ್ದಾರೆ. ಮೇಲು ಕೀಳು ಎಂಬ ಭಾವ ಅಲ್ಲಿ ಇನ್ನೂ ಜೀವಂತವಾಗಿದೆ~ ಎಂದರು.
`ಜಾತಿ ಭಾವವನ್ನು ಹೋಗಲಾಡಿಸಬೇಕೆಂದರೆ ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು. ವಿದ್ಯಾವಂತರಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ತಮ್ಮ ಘನತೆಯನ್ನು ಹೆಚ್ಚಿಸಿಕೊಳ್ಳಬೇಕು~ ಎಂದು ಹೇಳಿದರು.
ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕಿ ಡಾ.ಕಮಲಮ್ಮ ಮಾತನಾಡಿ, `ಅಂಬೇಡ್ಕರ್ ಅವರು ನಡೆದ ದಾರಿ ನಮಗೆ ಇಂದಿಗೂ ಮಾರ್ಗದರ್ಶಕವಾಗಿದೆ. ಅವರು ಹಾಕಿಕೊಟ್ಟ ಆದರ್ಶದ ಬದುಕನ್ನು ನಮ್ಮಲ್ಲಿ ಅಳವಡಿಸಿಕೊಳ್ಳಬೇಕು. ಸಂಘಟಿತರಾಗಿ ಹೋರಾಡಬೇಕು~ ಎಂದರು.
ಕಾರ್ಯಕ್ರಮದಲ್ಲಿ ಗಾಯಕ ಬಾನಂದೂರು ಕೆಂಪಯ್ಯ, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಯು.ಡಿ.ನರಸಿಂಹಯ್ಯ, ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಮಹಾದೇವ ಮಠಪತಿ, ಸಚಿವಾಲಯ ಎಸ್ಸಿ ಮತ್ತು ಎಸ್ಟಿ ನೌಕರರ ಸಂಘದ ಅಧ್ಯಕ್ಷ ಎಚ್.ಕೆ.ರವಿಮೂರ್ತಿ ಉಪಸ್ಥಿತರಿದ್ದರು.