ತುಮಕೂರು: ಜನರ ಅಪೇಕ್ಷೆ ಈಡೇರಿಸುವುದು ಸರ್ಕಾರದ ಕರ್ತವ್ಯ. ಜನರು ಬೇಡಿಕೆ ಇಟ್ಟ ಕಡೆಗಳಲ್ಲಿ ಆರನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಇಲ್ಲಿ ಶುಕ್ರವಾರ ಸ್ಪಷ್ಟಪಡಿಸಿದರು.
ಈ ಕಾರ್ಯ ಒಮ್ಮೆಲೇ ಸಾಧ್ಯವಿಲ್ಲ. ಕಾಲ ಕ್ರಮೇಣ ಸಾಧ್ಯವಾಗಲಿದೆ. ಇದಕ್ಕಾಗಿ ಅಗತ್ಯ ಸಿದ್ಧತೆಯನ್ನು ಸರ್ಕಾರ ಮಾಡಿಕೊಳ್ಳಬೇಕಾಗುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಆಂಗ್ಲ ಮಾಧ್ಯಮ ಶಾಲೆ ತೆರೆಯುವ ಸರ್ಕಾರದ ನೀತಿಯಿಂದ ಮಾತೃ ಭಾಷೆಗೆ ಕೊಡಲಿ ಪೆಟ್ಟು ಬೀಳುವುದಿಲ್ಲವೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಮಾತೃ ಭಾಷೆಯಲ್ಲಿ ಶಿಕ್ಷಣ ನೀಡುವಂತೆ ಮಾತೃ ಭಾಷಾ ನೀತಿ ಇದ್ದು ಸರ್ಕಾರ ಅದಕ್ಕೆ ಕಟಿಬದ್ಧವಾಗಿದೆ ಎಂದರು.
ಆಂಗ್ಲ ಮಾಧ್ಯಮ ಆರಂಭಿಸಲು ಹೋಬಳಿಗೊಂದರಂತೆ ಶಾಲೆಯನ್ನು ಗುರುತಿಸುವ ಪ್ರಕ್ರಿಯೆ ಚಾಲನೆಯಲ್ಲಿದ್ದು, ಸ್ಥಳೀಯರ ಬೇಡಿಕೆ, ಎಸ್ಡಿಎಂಸಿ ಸದಸ್ಯರ ಅಭಿಪ್ರಾಯ ಪಡೆದು 6ನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಾಲೆ ತೆರೆಯಲಾಗುವುದು. ಆಂಗ್ಲ ಮಾಧ್ಯಮ ಶಾಲೆ ತೆರೆಯುವುದನ್ನು ಸರ್ಕಾರ ಪ್ರೋತ್ಸಾಹಿಸುತ್ತದೆ. ಇದಕ್ಕೆ ನಿಯಮಾವಳಿಯಲ್ಲಿ ಅವಕಾಶವಿದೆ ಎಂದು ಹೇಳಿದರು.
ಒಂದರಿಂದ ಐದನೇ ತರಗತಿವರೆಗೆ ಮಾತೃ ಭಾಷೆಯಲ್ಲಿ ಶಿಕ್ಷಣ ನೀಡುವುದಕ್ಕೆ ಸರ್ಕಾರ ಈಗಲೂ ಬದ್ಧವಾಗಿದೆ. ಭಾಷಾ ನೀತಿಯು ಸುಪ್ರೀಂ ಕೋರ್ಟ್ನಲ್ಲಿದ್ದು ಯಥಾಸ್ಥಿತಿ ಕಾಪಾಡಿಕೊಳ್ಳಲಾಗುತ್ತದೆ. ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನೂ ಇದರಲ್ಲಿ ಒಂದು ಭಾಗವಾಗಿ ಪರಿಗಣಿಸಿರುವುದರಿಂದ ಕೇಂದ್ರ ಸರ್ಕಾರ ಮಾತೃ ಭಾಷಾ ನೀತಿ ರೂಪಿಸಬೇಕಾಗಿದೆ. ಈ ಸಂಬಂಧ ಕೇಂದ್ರದ ಕಾನೂನು, ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಮನವಿಯನ್ನು ಮಾಡಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಎಂಟು ಮತ್ತು ಒಂಬತ್ತನೇ ತರಗತಿ ವಿದ್ಯಾರ್ಥಿಗಳಿಗೆ ಜೂನ್-ಜುಲೈ ಒಳಗೆ ಸೈಕಲ್ ವಿತರಿಸಲಾಗುವುದು ಎಂದರು.