ಬೆಂಗಳೂರು: ಆಟೊ ಎಲ್ಪಿಜಿ ಸೇರಿದಂತೆ ತೈಲೋತ್ಪನ್ನಗಳ ಬೆಲೆ ಹೆಚ್ಚಳದ ಕ್ರಮವನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಪುರಭವನದ ಬಳಿ ಬುಧವಾರ ಪ್ರತಿಭಟನೆ ಮಾಡಿದರು.
ಪ್ರತಿಭಟನಾಕಾರರು ಪುರಭವನದ ಮುಂಭಾಗದಲ್ಲಿ ಸಾಂಕೇತಿಕವಾಗಿ ಸೌದೆ ಒಲೆಯಲ್ಲಿ ಅಡುಗೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸು ವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮತ್ತೊಂದೆಡೆ ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪದೇ ಪದೇ ಹೆಚ್ಚಿಸುತ್ತಿದೆ. ಇದರಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಂಸದ ಅನಂತಕುಮಾರ್ ದೂರಿದರು.
ಶಾಸಕ ಆರ್.ಅಶೋಕ ಮಾತನಾಡಿ, ‘ಭ್ರಷ್ಟಾಚಾರದಲ್ಲಿ ಮುಳುಗಿರುವ ಕೇಂದ್ರ ಸರ್ಕಾರ ಜನಸಾಮಾನ್ಯರ ಬದುಕನ್ನು ಹಾಳು ಮಾಡಿದೆ. ಜನವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಬಡವರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದೆ’ ಎಂದರು.
ಅನಂತಕುಮಾರ್ ಮತ್ತು ಅಶೋಕ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಪುರಭವನದ ಬಳಿಯಿಂದ ನರಸಿಂಹರಾಜ ಚೌಕದವರೆಗೆ ಆಟೊ ಎಳೆದುಕೊಂಡು ಹೋಗುವ ಮೂಲಕ ತೈಲೋತ್ಪನ್ನಗಳ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು.
ಸಂಸದ ಪಿ.ಸಿ.ಮೋಹನ್, ಶಾಸಕರಾದ ಗೋವಿಂದ ಕಾರಜೋಳ, ಎಲ್.ಎ.ರವಿಸುಬ್ರಹ್ಮಣ್ಯ, ವಿಧಾನ ಪರಿಷತ್ ಸದಸ್ಯೆ ತಾರಾ, ಬಿಜೆಪಿ ನಗರ ಘಟಕದ ಅಧ್ಯಕ್ಷ ಸುಬ್ಬಣ್ಣ, ನಿರ್ಮಾಪಕಿ ಶಿಲ್ಪಾ ಗಣೇಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.