ಬೆಂಗಳೂರು: ‘ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ವಿರೋಧಿಸಿ ಡಿ. 24ರಂದು ಅಖಿಲ ಭಾರತ ರಸ್ತೆ ಸಾರಿಗೆ ನೌಕರರ ಒಕ್ಕೂಟದ ರಾಜ್ಯ ಘಟಕದ ವತಿಯಿಂದ ನಗರದ ಪುರಭವನದಿಂದ ವಿಧಾನ ಸೌಧ ಚಲೋ ಚಳವಳಿ ಹಮ್ಮಿಕೊಳ್ಳಲಾಗಿದೆ’ ಎಂದು ಒಕ್ಕೂಟದ ರಾಜ್ಯ ಘಟಕದ ಪ್ರಧಾನ ಸಂಚಾಲಕ ಎಸ್.ಪ್ರಸನ್ನಕುಮಾರ್ ತಿಳಿಸಿದರು.
ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೆಎಸ್ ಆರ್ಟಿಸಿ, ಬಿಎಂಟಿಸಿ ನೌಕರರು, ಆಟೊ, ಟ್ಯಾಕ್ಸಿ ಚಾಲಕರು, ಖಾಸಗಿ ಬಸ್ ಚಾಲಕರು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ನೌಕರರು ಚಳವಳಿಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಎಸ್ಮಾ ಕಾಯ್ದೆಯು ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ. ಇದರ ಮೂಲಕ ಕಾಂಗ್ರೆಸ್ ಸರ್ಕಾರದ ನಿಜ ಬಣ್ಣ ಬಯಲಾಗಿದೆ ಎಂದು ದೂರಿದರು.
ಕಳೆದ 9 ವರ್ಷಗಳಿಂದ ಯಾವ ಸರ್ಕಾರಗಳು ಜಾರಿಗೊಳಿಸದ ಈ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸುವ ಮೂಲಕ ಕಾರ್ಮಿಕರ ಹಕ್ಕನ್ನು ದಮನ ಮಾಡಲು ಮುಂದಾ ಗಿದೆ ಎಂದು ಪ್ರಸನ್ನ ಕುಮಾರ್ ಆರೋಪಿಸಿದರು.
ಕಾರ್ಮಿಕರನ್ನು ಅಪರಾಧಿಗಳು, ಕಳ್ಳರ ರೀತಿಯಲ್ಲಿ ನೋಡುವ ಈ ಧೊರಣೆಯನ್ನು ಸರ್ಕಾರ ಕೈಬಿಡಬೇಕು ಎಂದರು.
ಸರ್ಕಾರ ಈ ಕಾರ್ಮಿಕ ವಿರೋಧಿ ಕಾಯ್ದೆಯನ್ನು ಕೂಡಲೇ ಹಿಂಪಡೆ ಯದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳ ಲಾಗು ವುದು ಎಂದು ಅವರು ಈ ಸಂದರ್ಭದಲ್ಲಿ ಎಚ್ಚರಿಸಿದರು.