ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮೇಯರ್ ಅಥವಾ ಉಪ ಮೇಯರ್ ಹುದ್ದೆಗಳಲ್ಲಿ ಯಾವುದಾದರೂ ಒಂದನ್ನು ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ ಮೀಸಲಿಡದೆ ಚುನಾವಣಾ ಅಧಿಸೂಚನೆ ಹೊರಡಿಸುವಂತಿಲ್ಲ ಎಂದು ರಾಜ್ಯ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಹೈಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.
ಲೋಕೇಶ್ ವಿ. ನಾಯಕ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರು ಈ ಮಧ್ಯಂತರ ಆದೇಶ ನೀಡಿದರು.
ಮೇಯರ್ ಅಥವಾ ಉಪ ಮೇಯರ್ ಹುದ್ದೆಗಳಲ್ಲಿ ಯಾವುದಾದರೂ ಒಂದನ್ನು ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ ಮೀಸಲಿಡುವ ಉದ್ದೇಶ ಸರ್ಕಾರಕ್ಕೆ ಈಗಾಗಲೇ ಇದ್ದರೆ, ಅದರ ಅನುಸಾರ ಅಧಿಸೂಚನೆ ಹೊರಡಿಸಬಹುದು ಎಂದು ಆದೇಶದಲ್ಲಿ ಹೇಳಿದೆ.
ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಹುದ್ದೆ ಇದುವರೆಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ ಲಭಿಸಿಲ್ಲ. ಈ ಬಾರಿ ನ್ಯಾಯಾಲಯ ಮಧ್ಯಪ್ರವೇಶ ಮಾಡಿ, ಈ ಹುದ್ದೆಗಳಲ್ಲಿ ಯಾವುದಾದರೂ ಒಂದನ್ನು ಈ ವರ್ಗದ ಅಭ್ಯರ್ಥಿಗಳಿಗೆ ಒದಗಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಮೇ 5ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ನೀತಿಸಂಹಿತೆಯು ಮೇಯರ್ ಮತ್ತು ಉಪ ಮೇಯರ್ ಹುದ್ದೆಗಳಿಗೆ ನಡೆಯುವ ಚುನಾವಣೆಗೆ ಅಡ್ಡಿಯಾಗುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಸ್ಪಷ್ಟಪಡಿಸಿದೆ. ಪಾಲಿಕೆಗೆ ಈ ತಿಂಗಳ ಅಂತ್ಯದ ವೇಳೆ ಹೊಸ ಮೇಯರ್ ಆಯ್ಕೆಯಾಗಬೇಕಿದೆ.