ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಡಿಎ, ಎಫ್‌ಡಿಎ ಪರೀಕ್ಷಾ ಪೂರ್ವಭಾವಿ ಸಭೆ

Last Updated 4 ಜೂನ್ 2011, 6:15 IST
ಅಕ್ಷರ ಗಾತ್ರ

ಚಿತ್ರದುರ್ಗ: ರಾಜ್ಯ ಲೋಕಸೇವಾ ಆಯೋಗದಿಂದ ದ್ವಿತೀಯದರ್ಜೆ ಸಹಾಯಕರ ಹುದ್ದೆಗಳ ಭರ್ತಿಗೆಜೂನ್ 5 ಹಾಗೂ ಪ್ರಥಮದರ್ಜೆ ಸಹಾಯಕರ ಹುದ್ದೆಗಳ ಭರ್ತಿಗೆ ಜೂನ್ 19ರಂದು ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದ್ವಿತೀಯದರ್ಜೆ ಸಹಾಯಕರ ಹುದ್ದೆಗೆ ಜಿಲ್ಲೆಯ 64 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಕೇಂದ್ರಗಳಲ್ಲಿ 18,720 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 64 ಕೇಂದ್ರಗಳ ಪೈಕಿ 37 ಕೇಂದ್ರಗಳು ಚಿತ್ರದುರ್ಗ ನಗರದಲ್ಲಿದ್ದು, 10,920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಹಿರಿಯೂರು ಪಟ್ಟಣದ 10 ಕೇಂದ್ರಗಳಲ್ಲಿ 2,808 ಅಭ್ಯರ್ಥಿಗಳು ಹಾಗೂ ಚಳ್ಳಕೆರೆ ಪಟ್ಟಣದ 17 ಕೇಂದ್ರಗಳಲ್ಲಿ 4,992 ಅಭ್ಯರ್ಥಿಗಳು ದ್ವಿತೀಯದರ್ಜೆ ಸಹಾಯಕರ ಹುದ್ದೆಗೆ ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

ಪ್ರಥಮದರ್ಜೆ ಸಹಾಯಕರ ಹುದ್ದೆಗೆ ಜೂನ್ 19ರಂದು ಪರೀಕ್ಷೆ ನಡೆಯಲಿದ್ದು, ನಗರದ 22 ಕೇಂದ್ರಗಳಲ್ಲಿ 8,448 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜೂನ್ 5ರಂದು ನಡೆಯುವ ದ್ವಿತೀಯದರ್ಜೆ ಸಹಾಯಕರ ಹುದ್ದೆಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗೆ ಚಿತ್ರದುರ್ಗದಲ್ಲಿ 9 ಮಾರ್ಗ ಅಧಿಕಾರಿಗಳು ಹಾಗೂ 9 ವೀಕ್ಷಕರನ್ನು ನೇಮಕ ಮಾಡಲಾಗಿದೆ.

ಹಿರಿಯೂರಿನಲ್ಲಿ ತಲಾಇಬ್ಬರು ಮಾರ್ಗ ಅಧಿಕಾರಿಗಳು ಹಾಗೂ ವೀಕ್ಷಕರು ಮತ್ತು ಚಳ್ಳಕೆರೆಯಲ್ಲಿ ನಾಲ್ವರು ಮಾರ್ಗ ಅಧಿಕಾರಿಗಳು ಹಾಗೂ ನಾಲ್ವರು ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ಕೇಂದ್ರಕ್ಕೆ ಒಂದು ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗುತ್ತದೆ. ಅಭ್ಯರ್ಥಿಗಳು ಹಾಗೂ ಕೊಠಡಿ ಮೇಲ್ವಿಚಾರಕರು ಕೊಠಡಿಯೊಳಗೆ ಮೊಬೈಲ್ ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಧಿಕಾರಿಗಳು ಯಾವುದೇ ಪರೀಕ್ಷಾ ಅಕ್ರಮಗಳಿಗೆ ಅವಕಾಶ ನೀಡದೇ ಅಚ್ಚುಕಟ್ಟಾಗಿ ನಡೆಸಬೇಕೆಂದು ಸೂಚಿಸಿದರು.

ಅಭ್ಯರ್ಥಿಗಳ ಸಹಾಯಕ್ಕಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಸಹಾಯವಾಣಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದರು.ಸಹಾಯವಾಣಿಯ ಸಂಖ್ಯೆಗಳು ಈ ರೀತಿಯಾಗಿವೆ.

ಜಿಲ್ಲಾಧಿಕಾರಿ ಕಚೇರಿ: 08194-222811, ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ: 222259, 94489 99336, 99454 44126, 99729 76565.ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎ.ಎಸ್. ನಿರ್ವಾಣಪ್ಪ, ಉಪ ವಿಭಾಗಾಧಿಕಾರಿ ನಾಗರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಶಿಕ್ಷಣಾಧಿಕಾರಿ ರಮೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಷೇಧಾಜ್ಞೆ ಜಾರಿ
ಕಿರಿಯ ಹಾಗೂ ದ್ವಿತೀಯದರ್ಜೆ ಸಹಾಯಕರ ನೇಮಕಾತಿಗೆ ಜೂನ್ 5ರಂದು ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಪಟ್ಟಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಷೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ವಿಪುಲ್ ಬನ್ಸಾಲ್ ಆದೇಶಿಸಿದ್ದಾರೆ.

ಚಿತ್ರದುರ್ಗ ನಗರದಲ್ಲಿ 37 ಕೇಂದ್ರಗಳು, ಚಳ್ಳಕೆರೆ 17 ಹಾಗೂ ಹಿರಿಯೂರು ಪಟ್ಟಣದ 10 ಕೇಂದ್ರಗಳಲ್ಲಿ ಪರೀಕ್ಷೆ  ನಡೆಯಲಿದೆ. ಪರೀಕ್ಷೆ ನಡೆಯುವ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಇಂಟರ್‌ನೆಟ್ ಹಾಗೂ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಮುಚ್ಚುವಂತೆ ಮತ್ತು ಸಿಬ್ಬಂದಿ ಹಾಗೂ ಅಭ್ಯರ್ಥಿಗಳು ಕೇಂದ್ರಗಳಿಗೆ ಮೊಬೈಲ್‌ಗಳನ್ನು ತರಬಾರದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT